ADVERTISEMENT

ಕೇರಳದಲ್ಲಿ ಭಾರಿ ಮಳೆ, ಭೂಕುಸಿತ: ಸಾವಿನ ಸಂಖ್ಯೆ 24ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2021, 8:27 IST
Last Updated 18 ಅಕ್ಟೋಬರ್ 2021, 8:27 IST
 ಎಎಫ್‌ಪಿ ಚಿತ್ರ
ಎಎಫ್‌ಪಿ ಚಿತ್ರ   

ತಿರುವನಂತಪುರಂ: ಕೇರಳದಲ್ಲಿ ಭಾರೀ ಮಳೆ ಮತ್ತು ಭೂಕುಸಿತದಿಂದಾಗಿ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಭಾನುವಾರ ಮಧ್ಯಾಹ್ನದಿಂದೀಚೆಗೆ ಮಳೆ ಅಬ್ಬರ ಕಡಿಮೆಯಾಗಿದ್ದರೂ ಭೂಕುಸಿತದ ಭೀತಿಯಿಂದಾಗಿ ಅಧಿಕಾರಿಗಳು ನಿಗಾ ಇರಿಸಿದ್ದಾರೆ.

ಹವಾಮಾನ ಇಲಾಖೆಯು ಹನ್ನೊಂದು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್‌ ಘೋಷಿಸಿದೆ.

ಕೊಟಯಂ ಮತ್ತು ಇಡುಕ್ಕಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸುರಿದ ಅಕಾಲಿಕ ಮಳೆಗೆ ಮೇಘ ಸ್ಫೋಟವೂ ಕಾರಣ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.

ADVERTISEMENT

ಕೊಟಯಂ (13) ಮತ್ತು ಇಡುಕ್ಕಿ (9) ಜಿಲ್ಲೆಗಳಲ್ಲಿ ಇದುವರೆಗೆ ಒಟ್ಟು 22 ಮೃತ ದೇಹಗಳು ಪತ್ತೆಯಾಗಿವೆ. ಇನ್ನೂ ಎರಡು ಶವಗಳು ಪತ್ತೆಯಾಗಿಲ್ಲ‌ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಖ್ಯಮಂತ್ರಿ ಕಚೇರಿ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ನಾಪತ್ತೆಯಾಗಿರುವ ಇಬ್ಬರು ಇಡುಕ್ಕಿ ಜಿಲ್ಲೆಯವರಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎನ್ನಲಾಗಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ತಂಡಗಳನ್ನು ಪಟ್ಟಣಂತಿಟ್ಟ, ಅಲಪ್ಪುಳ, ಎರ್ನಾಕುಲಂ, ಇಡುಕ್ಕಿ‌, ಮಲಪ್ಪುರಂ ಮತ್ತು ತ್ರಿಶೂರ್ ಜಿಲ್ಲೆಗಳಿಗೆ ನಿಯೋಜಿಸಲಾಗಿದೆ. ಇಡುಕ್ಕಿ, ಕೊಲ್ಲಂ, ಕೊಟಯಂ, ಕಣ್ಣೂರ್‌ ಮತ್ತು ಪಾಲಕ್ಕಾಡು ಜಿಲ್ಲೆಗಳಿಗೆ ಹೆಚ್ಚುವರಿಯಾಗಿ ಐದು ತಂಡಗಳನ್ನು ನಿಯೋಜಿಸುವಂತೆ ಸೂಚಿಸಲಾಗಿದೆ.

ಸೇನೆಯ ಎರಡು ತಂಡಗಳನ್ನು ತಿರುವನಂತಪುರಂ ಮತ್ತು ಕೊಟಯಂ ಜಿಲ್ಲೆಗಳಿಗೆ ನಿಯೋಜಿಸಲಾಗುವುದು ಎಂದೂ ಸಿಎಂ ಕಚೇರಿ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.