ADVERTISEMENT

ಕೋವಿಡ್ ತಡೆಗೆ ಗಡಿ ಮುಚ್ಚಿದ ಕರ್ನಾಟಕ: ಪ್ರಧಾನಿಗೆ ದೂರಿತ್ತ ಕೇರಳ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2020, 6:49 IST
Last Updated 28 ಮಾರ್ಚ್ 2020, 6:49 IST
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್   

ತಿರುವನಂತಪುರಂ: ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಕರ್ನಾಟಕ ಪೊಲೀಸರು ಕೇರಳಕ್ಕೆ ತಲುಪುವ ರಸ್ತೆಯಲ್ಲಿ ಸಂಚಾರಕ್ಕೆ ತಡೆಯೊಡ್ಡಿದ್ದಾರೆ ಮತ್ತು ಆ ಮೂಲಕ ಕೇರಳಕ್ಕೆ ಅಗತ್ಯ ವಸ್ತುಗಳ ಸರಬರಾಜಿಗೆ ಅಡ್ಡಿಪಡಿಸಿದ್ದಾರೆ. ಹೀಗಾಗಿ ಕೂಡಲೇ ಮಧ್ಯೆ ಪ್ರವೇಶಿಸಬೇಕು ಎಂದು ಹೇಳಿದ್ದಾರೆ.

ಕರ್ನಾಟಕ ಪೊಲೀಸರು ರಸ್ತೆ ಸಂಚಾರಕ್ಕೆತಡೆಯೊಡ್ಡಿರುವುದರಿಂದಕೇರಳಕ್ಕೆ ಪ್ರವೇಶಿಸಲು ಸಾಧ್ಯವಾಗದ ಕಾರಣದಿಂದಾಗಿ ಅಗತ್ಯ ಸರಕುಗಳನ್ನು ಹೊಂದಿದ್ದ ಲಾರಿಗಳು ಗಡಿಯಲ್ಲಿಯೇ ಸಿಲುಕಿಕೊಂಡಿವೆ. ಹೀಗಾಗಿ ಕೇಂದ್ರವು ಮಧ್ಯಸ್ಥಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಪತ್ರ ಬರೆದಿದ್ದಾರೆ ಎಂದು ಕೇರಳ ಸರ್ಕಾರದ ಮೂಲಗಳು ತಿಳಿಸಿವೆ.

ಶುಕ್ರವಾರ ಸಂಜೆ ಕಳುಹಿಸಿದ ಪತ್ರದ ಪ್ರಕಾರ, ಕರ್ನಾಟಕ ಪೊಲೀಸರ ಕ್ರಮದಿಂದಾಗಿ ವಿರಾಜಪೇಟೆ ಮೂಲಕ ಕೇರಳವನ್ನು ಸಂಪರ್ಕಿಸುವ ತಲಶ್ಶೇರಿ–ಕೊಡಗು ರಾಜ್ಯ ಹೆದ್ದಾರಿ- 30 ಅನ್ನು ಬಂದ್ ಮಾಡಲಾಗಿದೆ. ಆದ್ದರಿಂದ ಅಗತ್ಯ ಸರಕುಗಳನ್ನು ಸಾಗಿಸುವ ವಾಹನಗಳು ಕೇರಳವನ್ನು ತಲುಪಲು ಹೆಚ್ಚು ದೂರ ಪ್ರಯಾಣಿಸಬೇಕಾಗುತ್ತದೆ.

ADVERTISEMENT

ಇಂತಹ ಪರಿಸ್ಥಿತಿಯು ಅಗತ್ಯ ವಸ್ತುಗಳ ಸಾಗಣೆ ಮೇಲೆ ಪರಿಣಾಮ ಬೀರುತ್ತದೆ ಮತ್ತು ಬಿಕ್ಕಟ್ಟಿನ ಈ ಸಮಯದಲ್ಲಿ ಕೇರಳದ ಜನರಿಗೆ ಹೆಚ್ಚಿನ ತೊಂದರೆಗಳನ್ನುಂಟು ಮಾಡುತ್ತದೆ. ಆದ್ದರಿಂದ ಈ ವಿಚಾರದಲ್ಲಿ ಪ್ರಧಾನಮಂತ್ರಿಯು ತುರ್ತು ಹಸ್ತಕ್ಷೇಪ ವಹಿಸಬೇಕು ಎಂದು ಕೇರಳ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.

ಮಣ್ಣಿನ ಗುಡ್ಡೆಯನ್ನು ಹಾಕಿ ಕೇರಳವನ್ನು ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ನಿರ್ಬಂಧಿಸಿದ್ದಕ್ಕಾಗಿ ವಿಜಯನ್ ಅವರು ಕರ್ನಾಟಕದ ಅಧಿಕಾರಿಗಳ ಮೇಲೆ ಶುಕ್ರವಾರ ವಾಗ್ದಾಳಿ ನಡೆಸಿದ್ದರು. ಕಾಸರಗೋಡಿನ ರೋಗಿಗಳು ಸಹ ಡಯಾಲಿಸಿಸ್‌ಗಾಗಿ ಮಂಗಳೂರಿನ ಆಸ್ಪತ್ರೆಗಳಿಗೆ ತೆರಳಲು ಸಾಧ್ಯವಾಗುತ್ತಿಲ್ಲ. ಕೇರಳದ ಮುಖ್ಯ ಕಾರ್ಯದರ್ಶಿ ಕರ್ನಾಟಕದ ಮುಖ್ಯ ಕಾರ್ಯದರ್ಶಿಯೊಂದಿಗೆಚರ್ಚಿಸಿದ್ದು,ಅವರು ಸಮಸ್ಯೆಯನ್ನು ಪರಿಹರಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.