ADVERTISEMENT

ಕೇರಳ: ಕುಲಾಧಿಪತಿ ಹುದ್ದೆಯಿಂದ ರಾಜ್ಯಪಾಲರನ್ನು ತೆಗೆಯಲು ಸುಗ್ರೀವಾಜ್ಞೆ

ವಿ.ವಿ ಕಾಯ್ದೆಗೆ ತಿದ್ದುಪಡಿ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2022, 11:02 IST
Last Updated 9 ನವೆಂಬರ್ 2022, 11:02 IST
ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌
ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌   

ತಿರುವನಂತಪುರ: ರಾಜ್ಯದ ವಿಶ್ವವಿದ್ಯಾಲಯಗಳ ಕುಲಾಧಿಪತಿ ಹುದ್ದೆಯಿಂದ ರಾಜ್ಯಪಾಲರನ್ನು ತೆಗೆದುಹಾಕಲು ಅನುಕೂಲವಾಗುವಂತೆ ವಿ.ವಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರಲು ಕೇರಳ ಸರ್ಕಾರ ಬುಧವಾರ ನಿರ್ಧರಿಸಿದೆ.

ಅಲ್ಲದೇ, ಶೈಕ್ಷಣಿಕ ಕ್ಷೇತ್ರದ ತಜ್ಞರನ್ನು ಕುಲಾಧಿಪತಿಗಳ ಹುದ್ದೆಗೆ ನೇಮಕ ಮಾಡುವುದು ಸಹ ಈ ತಿದ್ದುಪಡಿಯ ಉದ್ದೇಶವಾಗಿದೆ. ಈ ಸಂಬಂಧ ಸುಗ್ರೀವಾಜ್ಞೆಯನ್ನು ಹೊರಡಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಈ ನಿರ್ಧಾರ ಕುರಿತು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ಬಿಡುಗಡೆ ಮಾಡಿದೆ. ‘ರಾಜ್ಯಪಾಲರು ಸಾಂವಿಧಾನಿಕ ಕರ್ತವ್ಯಗಳನ್ನು ನಿಭಾಯಿಸಬೇಕು. ಹೀಗಾಗಿ ಅವರನ್ನು ವಿಶ್ವವಿದ್ಯಾಲಯಗಳ ಕುಲಾಧಿಪತಿಗಳನ್ನಾಗಿ ನೇಮಕ ಮಾಡುವುದು ಸಮಂಜಸವಲ್ಲ ಎಂಬ ಪುಂಛಿ ಆಯೋಗದ ಶಿಫಾರಸಿನಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ADVERTISEMENT

ಇದರೊಂದಿಗೆ ರಾಜ್ಯಪಾಲ ಹಾಗೂ ಸರ್ಕಾರದ ನಡುವಿನ ಸಂಘರ್ಷ ಹೊಸ ಘಟ್ಟ ತಲುಪಿದಂತಾಗಿದೆ. ಇನ್ನೊಂದೆಡೆ, ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಅವರ ನಡೆ ಏನಾಗಿರಲಿದೆ ಎಂಬುದು ಮುಖ್ಯವಾಗಲಿದೆ.

ವಿಶ್ವವಿದ್ಯಾಲಯಗಳ ಕುಲಪತಿಗಳನ್ನು ಬದಲಿಸುವುದಕ್ಕೆ ಸಂಬಂಧಿಸಿ, ವಿ.ವಿ.ಗಳ ಕಾಯ್ದೆಗೆ ತಿದ್ದುಪಡಿ ತಂದ ಮಸೂದೆಗಳಿಗೆ ಎರಡು ತಿಂಗಳಾದರೂ ರಾಜ್ಯಪಾಲ ಖಾನ್‌ ಅವರು ಅಂಕಿತ ಹಾಕಿಲ್ಲ ಎಂಬುದು ಗಮನಾರ್ಹ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.