ಕಾಸರಗೋಡು: ಪತ್ನಿಗೆ ವಿಚ್ಛೇದನ ನೀಡಲು ವಾಟ್ಸ್ಆ್ಯಪ್ ಮೂಲಕ ತ್ರಿವಳಿ ತಲಾಖ್ ಘೋಷಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಭಾನುವಾರ(ಮಾ.02) ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಸರಗೋಡು ಸಮೀಪದ ನೆಲ್ಲಿಕಟ್ಟೆ ಮೂಲದ ಅಬ್ದುಲ್ ರಜಾಕ್ ಎಂಬಾತನ ವಿರುದ್ಧ ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಫೆಬ್ರವರಿ 21ರಂದು ವಾಟ್ಸಾಪ್ ವಾಯ್ಸ್ ಮೆಸೇಜ್ ಮೂಲಕ ಪತಿ ವಿಚ್ಛೇದನ ನೀಡಿದ್ದಾರೆ ಎಂದು ಆರೋಪಿಸಿ ಕಲ್ಲೂರವಿಯ 21 ವರ್ಷದ ಮಹಿಳೆ ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ದಾಖಲಿಸಲಾಗಿದೆ.
ದೂರಿನ ಪ್ರಕಾರ, ಗಲ್ಫ್ನಲ್ಲಿ ಕೆಲಸ ಮಾಡುತ್ತಿರುವ ರಜಾಕ್ ಯುಎಇಯಿಂದ ಮಹಿಳೆಯ ತಂದೆಯ ವಾಟ್ಸಾಪ್ ಸಂಖ್ಯೆಗೆ ತಲಾಖ್ ಸಂದೇಶವನ್ನು ಕಳುಹಿಸಿದ್ದಾರೆ.
ತನ್ನ ಗಂಡನ ಕುಟುಂಬದಿಂದ ನಿರಂತರ ವರದಕ್ಷಿಣೆ ಕಿರುಕುಳ ಎದುರಿಸುತ್ತಿದ್ದೇನೆ ಎಂದೂ ಮಹಿಳೆ ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.
ರಜಾಕ್ ₹12 ಲಕ್ಷ ವಂಚಿಸಿದ್ದಾರೆ ಎಂದು ಆಕೆಯ ತಂದೆ ಆರೋಪಿಸಿದ್ದಾರೆ.
ಮಹಿಳೆಯ ಕುಟುಂಬದ ದೂರಿನ ಮೇರೆಗೆ, ಪೊಲೀಸರು ಭಾನುವಾರ ರಜಾಕ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 351 (4) ಅಡಿಯಲ್ಲಿ ಕ್ರಿಮಿನಲ್ ಬೆದರಿಕೆ ಮತ್ತು ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
ಪತಿಯ ಸಂಬಂಧಿಕರೂ ಮಹಿಳೆಗೆ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.