ADVERTISEMENT

ಉತ್ತರ ಪ್ರದೇಶ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾದ ಕೇಶವ ಪ್ರಸಾದ್ ಮೌರ್ಯ ಟ್ವೀಟ್

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2022, 4:45 IST
Last Updated 22 ಆಗಸ್ಟ್ 2022, 4:45 IST
ಕೇಶವ ಪ್ರಸಾದ್ ಮೌರ್ಯ – ಐಎಎನ್ಎಸ್‌ ಚಿತ್ರ
ಕೇಶವ ಪ್ರಸಾದ್ ಮೌರ್ಯ – ಐಎಎನ್ಎಸ್‌ ಚಿತ್ರ   

ಲಖನೌ: ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಮಾಡಿರುವ ಒಂದು ಸಾಲಿನ ಟ್ವೀಟ್ ಈಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

‘ಸಂಘಟನೆಯು ಸರ್ಕಾರಕ್ಕಿಂತಲೂ ದೊಡ್ಡದಾಗಿದೆ’ ಎಂದು ಅವರು ಭಾನುವಾರ ಟ್ವೀಟ್ ಮಾಡಿದ್ದಾರೆ.

ಯಾವುದೇ ನಿರ್ದಿಷ್ಟ ವಿಷಯವನ್ನು ಉಲ್ಲೇಖಿಸದಿದ್ದರೂ ಅವರು ಮಾಡಿರುವ ಟ್ವೀಟ್ ಹಲವು ವದಂತಿಗಳಿಗೆ ಕಾರಣವಾಗಿದೆ. ಇತ್ತೀಚೆಗಷ್ಟೇ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದರು.

ADVERTISEMENT

ಬಿಜೆಪಿಯ ಉತ್ತರ ಪ್ರದೇಶ ಘಟಕಕ್ಕೆ ನೂತನ ಅಧ್ಯಕ್ಷರ ಆಯ್ಕೆ ಸದ್ಯದಲ್ಲೇ ನಡೆಯಲಿದೆ. ಈ ಸಂದರ್ಭದಲ್ಲೇ ಅವರು ಟ್ವೀಟ್ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

‘ಮೌರ್ಯ ಕೂಡ ಅಧ್ಯಕ್ಷ ಹುದ್ದೆಗಳ ಆಕಾಂಕ್ಷಿಯಲ್ಲೊಬ್ಬರು. ಹೀಗಾಗಿ ಟ್ವೀಟ್ ಮೂಲಕ ಅವರು ಬೆಂಬಲಿಗರಿಗೆ ಸುಳಿವು ನೀಡಿರಬಹುದು’ ಎಂದು ಪಕ್ಷದ ಮೂಲಗಳು ಅಭಿಪ್ರಾಯಪಟ್ಟಿವೆ.

ಒಬಿಸಿ (ಇತರ ಹಿಂದುಳಿದ ವರ್ಗ) ನಾಯಕನಾಗಿರುವ ಮೌರ್ಯ ಅವರು 2017ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ವಿಧಾನಪರಿಷತ್ತಿನಲ್ಲಿ ಇತ್ತೀಚೆಗಷ್ಟೇ ಸ್ವತಂತ್ರ ದೇವ್ ಸಿಂಗ್ ಬದಲು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಮೌರ್ಯ ಅವರನ್ನು ಆಯ್ಕೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.