ADVERTISEMENT

ನಾಲ್ಕು ಜೈಶ್ ಉಗ್ರರ ಹತ್ಯೆಯಿಂದ 'ದೊಡ್ಡ ದಾಳಿ'ಯ ಯತ್ನ ವಿಫಲಗೊಂಡಿದೆ: ಪ್ರಧಾನಿ

ಪಿಟಿಐ
Published 20 ನವೆಂಬರ್ 2020, 16:47 IST
Last Updated 20 ನವೆಂಬರ್ 2020, 16:47 IST
   

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಶ್ ಎ ಮೊಹಮ್ಮದ್ (ಜೆಇಎಂ) ಸಂಘಟನೆಯ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉನ್ನತ ಮಟ್ಟದ ಭದ್ರತಾ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ್ದಾರೆ. ಭದ್ರತಾ ಪಡೆಗಳು 'ದೊಡ್ಡ ದಾಳಿ ಮತ್ತು ವಿನಾಶ' ಉಂಟುಮಾಡುವ ಉಗ್ರರ ಯತ್ನವನ್ನು ವಿಫಲಗೊಳಿಸಿವೆ ಎಂದು ಪ್ರತಿಪಾದಿಸಿದ್ದಾರೆ.

26/11 ಮುಂಬೈ ಭಯೋತ್ಪಾದಕ ದಾಳಿಗೆ 12 ವರ್ಷವಾಗಲಿದ್ದು, ವಾರ್ಷಿಕೋತ್ಸವದಂದು ಜೈಶ್ ಉಗ್ರರು ಮತ್ತೊಂದು ದೊಡ್ಡ ದಾಳಿಗೆ ಸಂಚು ರೂಪಿಸಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಸಭೆಯ ನಂತರ ಅವರು ಮಾಡಿದ ಟ್ವೀಟ್‌ಗಳಲ್ಲಿ, 'ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಜೈಶ್-ಎ-ಮೊಹಮ್ಮದ್‌ ಸಂಘಟನೆಗೆ ಸೇರಿದ 4 ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ಅವರೊಂದಿಗಿದ್ದ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳಿಂದ ದೊಡ್ಡ ಹಾನಿ ಹಾಗೂ ವಿನಾಶ ಮಾಡುವ ಪ್ರಯತ್ನಗಳನ್ನು ಮತ್ತೊಮ್ಮೆ ತಪ್ಪಿಸಲಾಗಿದೆ' ಎಂದಿದ್ದಾರೆ.

ಭದ್ರತಾ ಪಡೆಗಳನ್ನು ಶ್ಲಾಘಿಸಿರುವ ಅವರು, 'ಮತ್ತೊಮ್ಮೆ ಅತ್ಯಂತ ಧೈರ್ಯ ಮತ್ತು ವೃತ್ತಿಪರತೆಯನ್ನು ಪ್ರದರ್ಶಿಸಿದ್ದಾರೆ' ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್:ಆಂಡ್ರಾಯ್ಡ್ ಆ್ಯಪ್|ಐಒಎಸ್ ಆ್ಯಪ್

'ಭದ್ರತಾ ಪಡೆಗಳ ಜಾಗರೂಕತೆಗೆ ಧನ್ಯವಾದಗಳು, ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ತಳಮಟ್ಟದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗುರಿಯಾಗಿಸುವ ಕೆಟ್ಟ ಉದ್ದೇಶವನ್ನು ಸೋಲಿಸಿದ್ದಾರೆ' ಎಂದು ಪ್ರಧಾನಿ ಹೇಳಿದ್ದಾರೆ.

ಪರಿಶೀಲನಾ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ಎನ್ಎಸ್ಎ ಅಜಿತ್ ಡೊಭಾಲ್‌, ವಿದೇಶಾಂಗ ಕಾರ್ಯದರ್ಶಿ ಮತ್ತು ಗುಪ್ತಚರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.