ಕೊಚ್ಚಿ: ‘ವಕ್ಫ್ ತಿದ್ದುಪಡಿ ಕಾಯ್ದೆ–2025ರ ವಿರುದ್ಧ ಹೇಳಿಕೆ ನೀಡುವ ಮೂಲಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದ್ದಾರೆ’ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಆರೋಪಿಸಿದ್ದಾರೆ.
ಮಂಗಳವಾರ ಇಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘ಸಂಸತ್ತಿನಲ್ಲಿ ಅನುಮೋದನೆ ಪಡೆದ ವಕ್ಫ್ ತಿದ್ದುಪಡಿ ಕಾಯ್ದೆ–2025 ಅನ್ನು ಮಮತಾ ಅವರು ಜಾರಿಗೊಳಿಸುವುದಿಲ್ಲ ಎಂದು ಹೇಳಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದರು.
ವಕ್ಫ್ ಕಾಯ್ದೆಯನ್ನು ಪಶ್ಚಿಮ ಬಂಗಾಳದಲ್ಲಿ ಜಾರಿಗೊಳಿಸುವುದಿಲ್ಲ ಎಂಬ ಮಮತಾ ಬ್ಯಾನರ್ಜಿ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಕಾಯ್ದೆ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಹೇಗೆ ಹೇಳಲು ಸಾಧ್ಯ? ಮಮತಾ ಅವರು ಸಾಂವಿಧಾನಿಕ ಹುದ್ದೆಯಲ್ಲಿ ಕೂತು, ಸಾಂವಿಧಾನಿಕ ಸಂಸ್ಥೆಯೊಂದು ಜಾರಿಗೆ ತಂದ ಕಾಯ್ದೆಯನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಹೇಳಲು ಹೇಗೆ ಸಾಧ್ಯ? ಅವರು ಸಂವಿಧಾನ ಪ್ರಕಾರವಾದ ಕಾನೂನನ್ನು ಪಾಲಿಸುತ್ತಿಲ್ಲ’ ಎಂದು ತಿಳಿಸಿದರು.
‘ವಕ್ಫ್ಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರಗಳಿಗೆ ಮಮತಾ ಬ್ಯಾನರ್ಜಿ ಅವರೇ ಕಾರಣ. ಮುಖ್ಯಮಂತ್ರಿಯೇ ಹಿಂಸಾಚಾರ ಪ್ರಚೋದಿಸುತ್ತಿದ್ದು, ಜನರು ಪ್ರತಿಭಟಿಸುವಂತೆ ಕರೆ ನೀಡುತ್ತಿದ್ದಾರೆ. ಆ ಮೂಲಕ ಸಂಸತ್ ಜಾರಿಗೊಳಿಸಿದ ಕಾಯ್ದೆಯನ್ನು ಪಾಲಿಸುತ್ತಿಲ್ಲ’ ಎಂದು ಹೇಳಿದರು.
ವಕ್ಫ್ ತಿದ್ದುಪಡಿ ಕಾಯ್ದೆ–2025 ವಿರೋಧಿಸಿ ಸೋಮವಾರ ಪಶ್ಚಿಮ ಬಂಗಾಳದ ದಕ್ಷಿಣ ಪರಗಣ ಜಿಲ್ಲೆಯಲ್ಲಿ ಹಿಂಸಾಚಾರ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.