ಕೊಚ್ಚಿ: ‘ತ್ರಿವಳಿ ತಲಾಖ್ ನಿಷೇಧಿಸುವ ಮಸೂದೆಯನ್ನು ರಾಜ್ಯಸಭೆಯಲ್ಲಿ ಅಂಗೀಕರಿಸಲುಯಾವುದೇ ಕಾರಣಕ್ಕೂ ಬಿಡುವುದಿಲ್ಲ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತ್ರಿವಳಿ ತಲಾಖ್ ಮಸೂದೆ ಜಾರಿಗೆ ವಿರೋಧಿಸುವ ಪಕ್ಷಗಳ ಜೊತೆಗೆ ಕಾಂಗ್ರೆಸ್ ಕೈ ಜೋಡಿಸಲಿದೆ’ ಎಂದರು.
‘ತ್ರಿವಳಿ ತಲಾಖ್ ನೀಡುವ ಮುಸ್ಲಿಂ ಪುರುಷರನ್ನು ನೇರವಾಗಿ ಜೈಲಿಗೆ ಕಳಿಸುವುದು ಸರಿಯಲ್ಲ. ಈ ಮಸೂದೆಯಿಂದ ಮಹಿಳಾ ಸಬಲೀಕರಣ ಸಾಧ್ಯವಿಲ್ಲ. ಈ ಕಾರಣಕ್ಕೆ ಕಾಂಗ್ರೆಸ್ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿದೆ. ಹತ್ತು ವಿರೋಧ ಪಕ್ಷಗಳು ಮುಕ್ತವಾಗಿ ವಿರೋಧ ವ್ಯಕ್ತಪಡಿಸಿವೆ’ ಎಂದು ತಿಳಿಸಿದರು.
ತ್ರಿವಳಿ ತಲಾಖ್ ನಿಷೇಧಿಸುವ ಮಸೂದೆಗೆ ಲೋಕಸಭೆಯು ಗುರುವಾರ ಒಪ್ಪಿಗೆ ನೀಡಿದ್ದು, ರಾಜ್ಯಸಭೆಯ ಸಮ್ಮತಿ ದೊರೆತರೆ ಕಾಯ್ದೆಯಾಗಿ ಜಾರಿಗೆ ಬರಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.