ಬೆಂಗಳೂರು: ‘1998, 1999 ಮತ್ತು 2004ರ ಕೆಪಿಎಸ್ಸಿ ನೇಮಕಾತಿಗೆ ಸಂಬಂಧಿಸಿದಂತೆ 27 ಅಭ್ಯರ್ಥಿಗಳಿಗೆ ತಕ್ಷಣವೇ ನೇಮಕಾತಿ ಪತ್ರ ನೀಡಬೇಕು ಇಲ್ಲವೇ ಈ ಕುರಿತಂತೆ ಉತ್ತರಿಸಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಜರಾಗಬೇಕು’ ಎಂದು ಹೈಕೋರ್ಟ್, ಸರ್ಕಾರಕ್ಕೆ ತಾಕೀತು ಮಾಡಿದೆ.
ನಗರದ ಎಸ್. ಶ್ರೀನಿವಾಸ್ ಸೇರಿದಂತೆ ಐವರು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಹಾಗೂ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ದಿನೇಶ್ ರಾವ್, ‘ಈಗಾಗಲೇ ಕೆಪಿಎಸ್ಸಿ ಕಳುಹಿಸಿರುವ ಅರ್ಹ ಅಭ್ಯರ್ಥಿಗಳ ಪಟ್ಟಿಯು, ಸರ್ಕಾರದ ಪರಿಶೀಲನೆಯಲ್ಲಿದೆ. ಈ ಪ್ರಕ್ರಿಯೆ ಪೂರ್ಣಗೊಳ್ಳಲು ಇನ್ನಷ್ಟು ಕಾಲಾವಕಾಶ ಬೇಕು. ಅಂತೆಯೇ, ಈ ಕುರಿತ ನ್ಯಾಯಾಂಗ ನಿಂದನೆ ಅರ್ಜಿ ಸುಪ್ರೀಂ ಕೋರ್ಟ್ನಲ್ಲಿ ಇದೇ 5ರಂದು ವಿಚಾರಣೆಗೆ ಬರಲಿದೆ’ ಎಂದು ವಿವರಿಸಿದರು.
ಇದಕ್ಕೆ ಕಿಡಿಕಾರಿದ ನ್ಯಾಯಪೀಠ, ‘ಅದೆಲ್ಲಾ ಸಾಧ್ಯವಿಲ್ಲ. ಸುಮ್ಮನೇ ಕಾರಣ ಹೇಳಿ ತಪ್ಪಿಸಿಕೊಳ್ಳುತ್ತೀರಿ. ಬುಧವಾರದೊಳಗೆ (ಏ.3) ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಬೇಕು, ಇಲ್ಲವೇ ಮುಖ್ಯ ಕಾರ್ಯದರ್ಶಿ ಕೋರ್ಟ್ಗೆ ಹಾಜರಾಗಬೇಕು’ ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿತು.
ವಿಚಾರಣೆಯನ್ನು ಇದೇ 4ಕ್ಕೆ ಮುಂದೂಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.