ನವದೆಹಲಿ: ಕೃಷ್ಣಾ ಜಲವಿವಾದ ನ್ಯಾಯಮಂಡಳಿ-2ರ (ಕೆಡಬ್ಲ್ಯೂಡಿಟಿ) ಅಂತಿಮ ತೀರ್ಪಿನ ಅಧಿಸೂಚನೆಗೆ ಸಂಬಂಧಿಸಿ ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾಯಪೀಠವೇ ಜನವರಿ 20ರಿಂದ ವಿಚಾರಣೆ ಮುಂದುವರಿಸುವಂತೆ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಗೆ ನೀಡಿದೆ.
ಕರ್ನಾಟಕದ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲರಾದ ಶ್ಯಾಮ್ ದಿವಾನ್ ಮತ್ತು ಮೋಹನ್ ಕಾತರಕಿ ಅವರು ಹಿಂದೆ ವಿಚಾರಣೆ ನಡೆಸಿದ್ದ ಪೀಠವನ್ನೇ ಮತ್ತೆ ರಚಿಸುವ ಅಗತ್ಯದ ಬಗ್ಗೆ ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ಪೀಠಕ್ಕೆ ಮನವರಿಕೆ ಮಾಡಿದರು.
ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠವನ್ನು ಮತ್ತೆ ರಚಿಸಲು ಡಿ.ವೈ. ಚಂದ್ರಚೂಡ್ ಅವರು ಒಪ್ಪಿಗೆ ನೀಡಿದ್ದಾರೆ. ಇದೇ ನ್ಯಾಯಮೂರ್ತಿಗಳಿದ್ದ ನ್ಯಾಯಪೀಠವು ಹಿಂದೆ ಕೃಷ್ಣಾ ಜಲನಯನ ಪ್ರದೇಶದ ರಾಜ್ಯಗಳಾದ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.