ಮಹಾಕುಂಭಮೇಳ
(ರಾಯಿಟರ್ಸ್ ಚಿತ್ರ)
ಲಖನೌ/ಪ್ರಯಾಗ್ರಾಜ್: ಪ್ರಯಾಗ್ರಾಜ್ನ ಸಂಗಮದಲ್ಲಿ ಮೌನಿ ಅಮಾವಾಸ್ಯೆಯಂದು ಕಾಲ್ತುಳಿತ ದುರಂತ ಸಂಭವಿಸಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಜನಸಂದಣಿ ನಿಯಂತ್ರಣ, ಭಕ್ತರ ಸುರಕ್ಷತೆ ಹಾಗೂ ಸಂಚಾರ ದಟ್ಟಣೆಗೆ ಸಂಬಂಧಿಸಿದಂತೆ ಇಲಾಖೆಗಳ ಸಮನ್ವಯಕ್ಕೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.
2019ರ ಕುಂಭಮೇಳದ ಸಂದರ್ಭದಲ್ಲಿ ವಿಭಾಗೀಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ಆಶಿಶ್ ಗೋಯಲ್ ಮತ್ತು ಎಡಿಎ ಮಾಜಿ ಉಪಾಧ್ಯಕ್ಷ ಭಾನು ಗೋಸ್ವಾಮಿ ಅವರನ್ನು ನಿಯುಕ್ತಿ ಮಾಡಲು ಆದೇಶಿಸಿದ್ದಾರೆ.
ಮಹಾಕುಂಭಮೇಳದ ವ್ಯವಸ್ಥೆಗಳನ್ನು ಕೂಲಂಕಷವಾಗಿ ಪರಿಶೀಲಿಸುವಂತೆ ಸಿಎಂ ಆದಿತ್ಯನಾಥ್, ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
'ಬಸಂತ್ ಪಂಚಮಿ'ಗೆ ಯಾವುದೇ ಸಮಸ್ಯೆಗಳಿಲ್ಲದೆ ವ್ಯವಸ್ಥೆ ಖಚಿತಪಡಿಸಿಕೊಳ್ಳಲು, ಭದ್ರತೆಗೆ ಸಂಬಂಧಿಸಿದಂತೆ ಪ್ರತಿಯೊಂದು ಅಂಶವನ್ನು ಎಚ್ಚರಿಕೆಯಿಂದ ಪರಿಶೀಲಿಸುವಂತೆ ಸೂಚನೆ ನೀಡಿದ್ದಾರೆ.
ಭಕ್ತರ ಸುಗಮ ಆಗಮನ ಮತ್ತು ನಿರ್ಗಮನಕ್ಕೆ ಬೇಕಾದ ವ್ಯವಸ್ಥೆ ಮಾಡುವಂತೆಯೂ ಸೂಚನೆ ನೀಡಿದ್ದಾರೆ. ಈ ಎಲ್ಲ ಕಾರ್ಯಾಚರಣೆಗಳ ಮೇಲ್ವಿಚಾರಣೆಗೆ ಐವರು ವಿಶೇಷ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಕುಂಭಮೇಳದಲ್ಲಿ ಮೌನಿ ಅಮಾವಾಸ್ಯೆಯಂದು ನಡೆದ ಕಾಲ್ತುಳಿತದಲ್ಲಿ ಕನಿಷ್ಠ 30 ಮಂದಿ ಮೃತಪಟ್ಟು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.