ನವದೆಹಲಿ: ಪೂರ್ವ ಲಡಾಖ್ನ ನೈಜ ನಿಯಂತ್ರಣ ರೇಖೆಯ (ಎಲ್ಎಸಿ) ಮೂರು ಸ್ಥಳಗಳಿಂದ ಯೋಧರನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆಯನ್ನು ಚೀನಾ ಮತ್ತು ಭಾರತ ಆರಂಭಿಸಿವೆ. ಗಡಿಯಲ್ಲಿನ ಪ್ರಕ್ಷುಬ್ಧ ಸ್ಥಿತಿ ಶಮನಕ್ಕೆ ಸಂಬಂಧಿಸಿ ಎರಡೂ ದೇಶಗಳ ಸೇನೆಯ ಮೇಜರ್ ಜನರಲ್ ಅಥವಾ ಬ್ರಿಗೇಡಿಯರ್ ಶ್ರೇಣಿಯ ಅಧಿಕಾರಿಗಳ ನಡುವೆ ಶನಿವಾರ ನಡೆದ ಸಭೆಯಲ್ಲಿ ಈ ಬಗ್ಗೆ ಒಮ್ಮತಕ್ಕೆ ಬರಲಾಗಿತ್ತು.
ಸೈನಿಕರು ಮತ್ತು ಶಸ್ತ್ರಸಜ್ಜಿತ ವಾಹನಗಳನ್ನು ಚೀನಾವು ಗಡಿಯಿಂದ 2.5 ಕಿ.ಮೀ. ಹಿಂದಕ್ಕೆ ಕರೆಸಿಕೊಂಡಿದೆ. ಗಸ್ತು ಠಾಣೆ 14, 15 ಮತ್ತು 17ಎ ಬಳಿಯಲ್ಲಿ ಈ ಯೋಧರು ಬೀಡುಬಿಟ್ಟಿದ್ದರು.
ಸೇನೆಯು ಹಿಂದಕ್ಕೆ ಸರಿಯುವ ಪ್ರಕ್ರಿಯೆ ಪೂರ್ಣಗೊಳ್ಳಲು ಇನ್ನೂ ಹತ್ತು ದಿನ ಬೇಕಾಗಬಹುದು ಎನ್ನಲಾಗಿದೆ.
ಪಾಂಗಾಂಗ್ ತ್ಸೊ ಸರೋವರದ ಉತ್ತರ ದಂಡೆಯಲ್ಲಿ ಎರಡೂ ಕಡೆಯ ಸೈನಿಕರ ಮುಖಾಮುಖಿ ಮುಂದುವರಿದಿದೆ. ಈ ಬಿಕ್ಕಟ್ಟು ಕೊನೆಗೊಳ್ಳಲು ಇನ್ನಷ್ಟು ಸಮಯ ಬೇಕಾದೀತು ಎನ್ನಲಾಗಿದೆ. ಲೆಫ್ಟಿನೆಂಟ್ ಜನರಲ್ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ಸಮಸ್ಯೆಗೆ ಪರಿಹಾರ ದೊರೆಯಬಹುದು ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.