ADVERTISEMENT

ಲಖಿಂಪುರ ಖೇರಿ ಪ್ರಕರಣ: ಎಲ್ಲಾ ಸಾಕ್ಷಿಗಳ ಹೇಳಿಕೆ ದಾಖಲಿಸಲು ‘ಸುಪ್ರೀಂ’ ಸೂಚನೆ

ಪಿಟಿಐ
Published 20 ಅಕ್ಟೋಬರ್ 2021, 9:45 IST
Last Updated 20 ಅಕ್ಟೋಬರ್ 2021, 9:45 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಎಲ್ಲಾ ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಬುಧವಾರ ಸೂಚಿಸಿದೆ.

ಲಖಿಂಪುರ ಖೇರಿ ಪ್ರಕರಣವನ್ನು ಇಂದು (ಬುಧವಾರ) ಸುಪ್ರೀಂಕೋರ್ಟ್‌ ವಿಚಾರಣೆ ನಡೆಸಿದೆ. ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌, ಹಿಮಾ ಕೊಹ್ಲಿ ಅವರಿದ್ದ ಪೀಠವು ಪರಿಶೀಲನೆ ನಡೆಸಿತು.

ಪ್ರಕರಣ ಸಂಬಂಧ ಒಟ್ಟು 44 ಸಾಕ್ಷಿಗಳ ಪೈಕಿ ಕೇವಲ ನಾಲ್ಕು ಜನರ ಹೇಳಿಕೆಗಳನ್ನು ಮಾತ್ರ ರಾಜ್ಯ ಸರ್ಕಾರ ದಾಖಲಿಸಿದೆ. ಉಳಿದ ಎಲ್ಲಾ ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸುವಂತೆ ರಾಜ್ಯ ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ. ವಿಚಾರಣೆಯನ್ನು ಅ.26ಕ್ಕೆ ಮುಂದೂಡಲಾಗಿದೆ.

ADVERTISEMENT

ಅ.3ರಂದು ಲಿಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದರು. ಪ್ರಕರಣದ ತನಿಖೆ ನಡೆಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರವು ಎಸ್‌ಐಟಿಗೆ ಆದೇಶಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶಿಶ್‌ ಮಿಶ್ರಾ ಸೇರಿದಂತೆ ಇದುವರೆಗೂ ಹತ್ತು ಜನರನ್ನು ಬಂಧಿಸಲಾಗಿದೆ. ಜತೆಗೆ, ಘಟನೆ ಕುರಿತು ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಇಬ್ಬರು ವಕೀಲರು ಪತ್ರ ಬರೆದಿದ್ದರು.

ಕೃಷಿ ಕಾಯ್ದೆಗಳನ್ನು ಅನುಷ್ಠಾನ ಮಾಡದಂತೆ ‌ಜನವರಿಯಲ್ಲಿ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿತ್ತು. ಅಲ್ಲದೆ 2020ರ ನವೆಂಬರ್‌ನಲ್ಲಿ ಈ ಕಾಯ್ದೆಗಳನ್ನು ವಿರೋಧಿಸಿ ಮೊದಲಿಗೆ ಪಂಜಾಬ್‌ನಲ್ಲಿ ರೈತರು ಪ್ರತಿಭಟನೆ ಆರಂಭಿಸಿದ್ದರು. ಬಳಿಕ ದೆಹಲಿ, ಹರಿಯಾಣ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ರೈತರು ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.