
ಬಂಧನ
ಲಾತೂರ್: ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ₹4,000 ಕಳ್ಳತನ ಪ್ರಕರಣದ ಆರೋಪಿಯನ್ನು ಬರೋಬ್ಬರಿ ಎರಡು ದಶಕಗಳ ಬಳಿಕ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಸುಮಾರು 20 ವರ್ಷಗಳ ಹಿಂದೆ ದಾಖಲಾಗಿದ್ದ ಪ್ರಕರಣ ಇದಾಗಿದೆ. ಆರೋಪಿ ಬಾಬು ಲಕ್ಷ್ಮಣ್ ಸಂಕೋಲೆ (41) ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಕಬ್ಬು ಕಟಾವು ಕೆಲಸ ಮಾಡುತ್ತಿದ್ದ ಈತನನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶ ಕಂಡಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜನವರಿ 27ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬುಧೋಡಾ ಗ್ರಾಮದ ಆರೋಪಿ ತಲೆಮರೆಸಿಕೊಳ್ಳುತ್ತಲೇ ಇದ್ದ. ಇದರಿಂದಾಗಿ ಪೊಲೀಸರಿಗೆ ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಬಳಿಕ ಲಾತೂರ್ ಪೊಲೀಸರ ವಿಶೇಷ ತಂಡವು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಯಿತು.
2006ರ ಜುಲೈ 10ರಂದು ಅಂದಾಜು ₹4,000 ಬೆಲೆ ಬಾಳುವ ಕಾರು ಸ್ಟೀರಿಯೊವನ್ನು ಕದ್ದಿರುವ ಬಗ್ಗೆ ಅರವಿಂದ್ ವಿಠಲರಾವ್ ಭೋಸಲೆ ದೂರು ದಾಖಲಿಸಿದ್ದರು. 2006ರ ಜುಲೈ 14ರಂದು ಆರೋಪಿಯನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಬಳಿಕ ವಿಚಾರಣೆಗೆ ಗೈರಾಗಿದ್ದ ಆರೋಪಿ ತಲೆಮರೆಸಿಕೊಂಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.