ನವದೆಹಲಿ: ಕೋವಿಡ್ ವಿರುದ್ಧದ ಹೋರಾಟದ ಸಿದ್ಧತೆಯಲ್ಲಿ ಯಾವುದೇ ಲೋಪವಾಗದ ಹಾಗೆ ಖಚಿತಪಡಿಸಿಕೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಸೋಮವಾರ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದ್ದಾರೆ.
ಸಾಂಕ್ರಾಮಿಕ ರೋಗದ ತಡೆರಹಿತ ನಿರ್ವಹಣೆಗೆ ಸೂಕ್ತ ಯೋಜನೆ ರೂಪಿಸಲು ಒತ್ತು ನೀಡಬೇಕು ಎಂದೂ ಅವರು ಹೇಳಿದರು.
ಕೋವಿಡ್ ವಿರುದ್ಧದ ಹೋರಾಟದಲ್ಲಿ ಕೇಂದ್ರವು ರಾಜ್ಯಗಳಿಗೆ ಸದಾ ಬೆಂಬಲವಾಗಿರುತ್ತದೆ ಎಂದು ಪುನರುಚ್ಚರಿಸಿದ ಅವರು, ದೇಶದಾದ್ಯಂತ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸಲು ಕೋವಿಡ್ ತುರ್ತು ಪ್ರತಿಕ್ರಿಯೆ ಮತ್ತು ಆರೋಗ್ಯ ವ್ಯವಸ್ಥೆಗಳ ಸನ್ನದ್ಧತೆ ಪಾಕೇಜ್ ಹಂತII (ಇಸಿಆರ್ಪಿ–II)ರ ಯೋಜನೆಯಡಿ ಕೇಂದ್ರ ಸರ್ಕಾರ ಬೆಂಬಲ ನೀಡಿದೆ ಎಂದು ಅವರು ಹೇಳಿದರು.
ಇಸಿಆರ್ಪಿ–II ಕೇಂದ್ರ ಪ್ರಾಯೋಜಿತ ಯೋಜನೆಯಾಗಿದೆ. ಕೋವಿಡ್ ಸೋಂಕನ್ನು ಪತ್ತೆ ಹಚ್ಚಲು, ಪ್ರತಿಕ್ರಿಯಿಸಲು ಮತ್ತು ತುರ್ತು ಪ್ರತಿಕ್ರಿಯೆ ಮತ್ತು ಸನ್ನದ್ಧತೆಗಾಗಿ ರಾಷ್ಟ್ರೀಯ ಆರೋಗ್ಯ ವ್ಯವಸ್ಥೆಗಳನ್ನು ಬಲಪಡಿಸುತ್ತದೆ.
ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್, ಗೋವಾ, ದಾದ್ರಾ ಮತ್ತು ನಗರ ಹವೇಲಿ ಹಾಗೂ ದಮನ್ ಮತ್ತು ದಿಯುವಿನ ಆರೋಗ್ಯ ಸಚಿವರು, ಉನ್ನತ ಅಧಿಕಾರಿಗಳು ಮತ್ತು ಮಾಹಿತಿ ಆಯುಕ್ತರೊಂದಿಗೆ ವರ್ಚುವಲ್ ಸಂವಾದ ನಡೆಸಿದ ಅವರು, ‘ಕೋವಿಡ್ ವಿರುದ್ಧದ ನಮ್ಮ ಹೋರಾಟದ ಸಿದ್ಧತೆಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.