ನವದೆಹಲಿ:‘ದೆಹಲಿಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳನ್ನು ಸ್ಥಳೀಯರಿಗೆ ಮೀಸಲಿಡಬೇಕು’ ಎಂದು ದೆಹಲಿ ಎಎಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ರದ್ದುಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಲೆಫ್ಟಿನೆಂಟ್ ಗವರ್ನರ್ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿದ್ದಾರೆ. ಗವರ್ನರ್ ಅವರ ಈ ನಡೆಯು ಎಎಪಿ ಮತ್ತು ಲೆಫ್ಟಿನೆಂಟ್ ಗವರ್ನರ್ ಕಚೇರಿಯ ನಡುವೆ ಸಂಘರ್ಷಕ್ಕೆ ಕಾರಣ ವಾಗಬಹುದು ಎನ್ನಲಾಗಿದೆ.
‘ಕೊರೊನಾ ವೈರಸ್ ಬಿಕ್ಕಟ್ಟಿನ ಸಂದರ್ಭದಲ್ಲಿ ದೆಹಲಿ ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ನಡೆಸುತ್ತಿರುವ ಆಸ್ಪತ್ರೆಗಳು ದೆಹಲಿಯವರಿಗೆ ಮಾತ್ರ ಚಿಕಿತ್ಸೆ ನೀಡಲಿವೆ’ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದರು. ದೆಹಲಿಯಲ್ಲಿ ಆರೋಗ್ಯ ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ಕೋವಿಡ್–19ರೊಂದಿಗೆ ಹೋರಾಡಲು ಆಸ್ಪತ್ರೆಗಳ ಒಟ್ಟಾರೆ ಸಿದ್ಧತೆ ಕುರಿತು ಮಾರ್ಗದರ್ಶನ ನೀಡಲು ದೆಹಲಿ ಸರ್ಕಾರವು ಐವರು ಸದಸ್ಯರ ಸಮಿತಿಯನ್ನು ನೇಮಿಸಿತ್ತು.
ಈ ಸಮಿತಿಯ ವರದಿ ಮೇರೆಗೆ ‘ದೆಹಲಿಯ ಆಸ್ಪತ್ರೆಗಳು ಇತರ ರಾಜ್ಯಗಳ ಜನರಿಂದ ತುಂಬಿ ತುಳುಕುವುದನ್ನು ತಪ್ಪಿಸಲು ಈ ನಿರ್ಧಾರ ತೆಗೆದು ಕೊಳ್ಳಬೇಕಾಯಿತು’ ಎಂದು ಕೇಜ್ರಿವಾಲ್ ಸಮರ್ಥಿಸಿಕೊಂಡಿದ್ದರು.
ಕೇಜ್ರಿವಾಲ್ ಸ್ವಯಂ ಕ್ವಾರಂಟೈನ್: ಗಂಟಲು ನೋವು ಮತ್ತು ಜ್ವರದಿಂದ ಬಳಲುತ್ತಿರುವ ಅರವಿಂದ್ ಕೇಜ್ರಿವಾಲ್ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದು, ಮಂಗಳವಾರ ಕೋವಿಡ್–19 ಪರೀಕ್ಷೆ ಮಾಡಿಸಿಕೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಮಧುಮೇಹದಿಂದ ಬಳಲುತ್ತಿರುವ ಕೇಜ್ರಿವಾಲ್ ಅವರಿಗೆ ಭಾನುವಾರ ಮಧ್ಯಾಹ್ನ ಗಂಟಲು ನೋವು, ಜ್ವರ ಕಾಣಿಸಿಕೊಂಡಿದೆ. ವೈದ್ಯರ ಸಲಹೆಯಂತೆ ಪರೀಕ್ಷೆ ಮಾಡಿಸಿಕೊಳ್ಳಲಿದ್ದಾರೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
**
ದೇಶದ ಮೂಲೆಮೂಲೆಗಳಿಂದ ಬರುವ ಜನರಿಗೆ ಚಿಕಿತ್ಸೆ ನೀಡುವುದು ಸವಾಲಾಗಿದೆ. ಬಹುಶಃ ನಾನು ಇಡೀ ದೇಶದ ಜನರಿಗೆ ಸೇವೆ ಸಲ್ಲಿಸುವುದು ದೇವರ ಚಿತ್ತವಾಗಿದೆ. ಎಲ್ಲರ ಚಿಕಿತ್ಸೆಗಾಗಿ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತೇನೆ
–ಅರವಿಂದ್ ಕೇಜ್ರಿವಾಲ್, ದೆಹಲಿ ಮುಖ್ಯಮಂತ್ರಿ, ಟ್ವೀಟ್
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.