ಪಟ್ನಾ: ಬಿಹಾರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹೀಗಾಗಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ‘ಲೋಕ ಜನಶಕ್ತಿ ಪಕ್ಷದ (ಎಲ್ಜೆಪಿ)’ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಆಡಳಿತ ನಡೆಸಲು ಅಸಮರ್ಥರಾಗಿದ್ದಾರೆ ಎಂದಿರುವ ಚಿರಾಗ್, ರಾಷ್ಟ್ರಪತಿ ಆಳ್ವಿಕೆ ಹೇರಲು ಶಿಫಾರಸು ಮಾಡಿ ಎಂದು ರಾಜ್ಯಪಾಲ ಫಗೂ ಚೌಹಾಣ್ ಅವರನ್ನು ಒತ್ತಾಯಿಸಿದ್ದಾರೆ.
ಈ ಕುರಿತು ರಾಜ್ಯಪಾಲರಿಗೆ ಪತ್ರ ಬರೆದಿರುವ ಅವರು, ನಲಂದಾ ಜಿಲ್ಲೆಯಲ್ಲಿ ಇತ್ತೀಚೆಗೆ ವಿಷಯುಕ್ತ ಮದ್ಯ ಸೇವನೆಯಿಂದ 11 ಮಂದಿ ಮೃತಪಟ್ಟಿರುವ ವಿಚಾರವನ್ನು ಉಲ್ಲೇಖಿಸಿದ್ದಾರೆ. ಪೊಲೀಸ್ ಸೇರಿದಂತೆ ರಾಜ್ಯದ ಸಂಸ್ಥೆಗಳೇ ಇದಕ್ಕೆ ಹೊಣೆ. ಮುಖ್ಯಮಂತ್ರಿಗಳು ಸಹ ಕರ್ತವ್ಯದಲ್ಲಿ ವಿಫಲರಾಗಿದ್ದಾರೆ. ರಾಜ್ಯದಲ್ಲಿ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿಯೂ ಅವರು ವಿಫಲರಾಗಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೇ ಇಲ್ಲ. ರಾಷ್ಟ್ರಪತಿ ಆಳ್ವಿಕೆ ಹೊರತುಪಡಿಸಿ ಬೇರೆ ದಾರಿಯಿಲ್ಲ’ ಎಂದೂ ಅವರು ಉಲ್ಲೇಖಿಸಿದ್ದಾರೆ.
ವಿಷಯುಕ್ತ ಮದ್ಯ ಸೇವನೆಯಿಂದ 11 ಮಂದಿ ಮೃತಪಟ್ಟಿರುವ ವಿಚಾರವನ್ನು ನಲಂದಾ ಜಿಲ್ಲಾಡಳಿತ ಈಗಾಗಲೇ ದೃಢಪಡಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.