ಮುಂಬೈ: ಮುಂಬೈಯ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ದೇಶವನ್ನು ತೊರೆದಿರುವ ಮಾಹಿತಿಯ ಹಿನ್ನೆಲೆಯಲ್ಲಿ ಆತನ ವಿರುದ್ಧ ಲುಕ್ಔಟ್ನೋಟಿಸ್ ಜಾರಿ ಮಾಡಲಾಗಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರಿಗೆ ಈ ವಿಷಯ ತಿಳಿಸಿ ಅವರು, ‘ಸಿಂಗ್ ದೇಶವನ್ನು ತೊರೆದಿರುವ ಬಗ್ಗೆ ನಮಗೆ ಮಾಹಿತಿ ಇದೆ. ಆದರೆ, ಆ ಮಾಹಿತಿ ಇನ್ನೂ ಖಚಿತ ಪಟ್ಟಿಲ್ಲ’ಎಂದು ಅವರು ಹೇಳಿದರು.
'ಸರ್ಕಾರಿ ಅಧಿಕಾರಿಯಾಗಿರುವುದರಿಂದ, ಸರ್ಕಾರದ ಅನುಮತಿಯಿಲ್ಲದೆ ಅವರು ದೇಶವನ್ನು ತೊರೆಯಲು ಸಾಧ್ಯವಿಲ್ಲ. ಆದರೂ ಅವರು ವಿದೇಶಕ್ಕೆ ಹೋಗಿದ್ದರೆ ಅದು ತಪ್ಪು’ ಎಂದು ವಾಲ್ಸೆ ಪಾಟೀಲ್ ಹೇಳಿದರು.
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಲಂಚದ ಆರೋಪ ಹೊರಿಸಿದ ಸಿಂಗ್ ಅವರನ್ನು ಹುಡುಕಲು ರಾಜ್ಯ ಸರ್ಕಾರ ಕೇಂದ್ರದೊಂದಿಗೆ ಸಂಪರ್ಕದಲ್ಲಿದೆ ಎಂದು ಅವರು ಹೇಳಿದ್ದಾರೆ.
ದೇಶಮುಖ್ ವಿರುದ್ಧ ಹಿರಿಯ ಐಪಿಎಸ್ ಅಧಿಕಾರಿ ಮಾಡಿರುವ ಆರೋಪಗಳ ಕುರಿತು ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿದೆ. ಮುಂಬೈ ಪೊಲೀಸ್ ಆಯುಕ್ತರಾಗಿ ಹೊರಹಾಕಲ್ಪಟ್ಟು, ಗೃಹ ರಕ್ಷಕ ದಳಕ್ಕೆ ವರ್ಗಾವಣೆಯಾದ ಕೆಲ ದಿನಗಳ ನಂತರ, ಸಿಂಗ್ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಬರೆದ ಪತ್ರದಲ್ಲಿ ದೇಶಮುಖ್ ಮುಂಬೈನಲ್ಲಿ ರೆಸ್ಟೋರೆಂಟ್ ಮತ್ತು ಬಾರ್ ಮಾಲೀಕರಿಂದ ಹಣ ಸಂಗ್ರಹಿಸುವಂತೆ ಪೊಲೀಸ್ ಅಧಿಕಾರಿಗಳನ್ನು ಕೇಳುತ್ತಿದ್ದರು ಎಂದು ಹೇಳಿಕೊಂಡಿದ್ದರು.
ಸಿಂಗ್ ಮಾಡಿರುವ ಭ್ರಷ್ಟಾಚಾರ ಆರೋಪಗಳ ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರವು ನಿವೃತ್ತ ನ್ಯಾಯಮೂರ್ತಿ ಕೈಲಾಶ್ ಉತ್ತಮ್ಚಂದ್ ಚಾಂಡಿವಾಲ್ ಅವರ ನೇತೃತ್ವದಲ್ಲಿ ಏಕ ಸದಸ್ಯ ತನಿಖಾ ಸಮಿತಿಯನ್ನು ರಚಿಸಿತ್ತು. ಆಯೋಗವು ವಿಚಾರಣೆಗೆ ಹಾಜರಾಗುವಂತೆ ಸಿಂಗ್ಗೆ ಹಲವು ಬಾರಿ ಸಮನ್ಸ್ ಜಾರಿ ಮಾಡಿತ್ತು, ಆದರೆ, ಈವರೆಗೆ ಸಿಂಗ್ ವಿಚಾರಣೆಗೆ ಹಾಜರಾಗಿಲ್ಲ. ಬಳಿಕ, ಸಮಿತಿಯು ಅವರ ವಿರುದ್ಧ ವಾರಂಟ್ ಸಹ ಹೊರಡಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.