ಲಖನೌ: ಉತ್ತರ ಪ್ರದೇಶದಲ್ಲಿ ಧ್ವನಿವರ್ಧಕಗಳ ತೆರವು ಕಾರ್ಯಾಚರಣೆ ಮುಂದುವರಿದಿದೆ. ಯೋಗಿ ಆದಿತ್ಯನಾಥ ಸರ್ಕಾರವು ಅನೇಕ ಧಾರ್ಮಿಕ ಸ್ಥಳಗಳಿಂದ ಈವರೆಗೆ 53,942 ಧ್ವನಿವರ್ಧಕಗಳನ್ನು ತೆರವು ಮಾಡಿದೆ.
‘ಭಾನುವಾರ ಬೆಳಿಗ್ಗೆ 7 ಗಂಟೆವರೆಗೆ ರಾಜ್ಯದ ವಿವಿಧ ಧಾರ್ಮಿಕ ಸ್ಥಳಗಳಿಂದ 53,942 ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದೆ. 60,295 ಧ್ವನಿವರ್ಧಕಗಳ ಶಬ್ದ ಪ್ರಮಾಣವನ್ನು ಕಡಿಮೆ ಮಾಡಿಸಲಾಗಿದೆ’ ಎಂದು ಉತ್ತರ ಪ್ರದೇಶ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.
ಧಾರ್ಮಿಕ ಸ್ಥಳಗಳಲ್ಲಿ ಅಕ್ರಮವಾಗಿ ಸ್ಥಾಪಿಸಿರುವ ಧ್ವನಿವರ್ಧಕಗಳನ್ನು ತೆರವುಗೊಳಿಸುವಂತೆ ಉತ್ತರ ಪ್ರದೇಶ ಸರ್ಕಾರ ಏಪ್ರಿಲ್ 24ರಂದು ಆದೇಶ ಹೊರಡಿಸಿತ್ತು.
‘ಧ್ವನಿವರ್ಧಕಗಳ ತೆರವು ವಿಚಾರವಾಗಿ ಜಿಲ್ಲಾಡಳಿತಗಳಿಂದ ಪಾಲನಾ ವರದಿ ಕೇಳಲಾಗಿದೆ. ಧಾರ್ಮಿಕ ನಾಯಕರ ಜತೆ ಮಾತುಕತೆ ನಡೆಸಿ ಅವರ ಸಹಕಾರದೊಂದಿಗೆ ಅಕ್ರಮ ಧ್ವನಿವರ್ಧಕಗಳನ್ನು ತೆರವು ಮಾಡುವಂತೆ ಪೊಲೀಸರಿಗೆ ಸೂಚಿಸಲಾಗಿದೆ’ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಅವನೀಶ್ ಕುಮಾರ್ ಅವಸ್ಥಿ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.