ADVERTISEMENT

ಮಧ್ಯಪ್ರದೇಶದಲ್ಲಿ ವಿಶ್ವಾಸ ಮತ ಮುಂದಕ್ಕೆ: ಸುಪ್ರೀಂ ಮೊರೆ ಹೋದ ಬಿಜೆಪಿ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2020, 12:37 IST
Last Updated 16 ಮಾರ್ಚ್ 2020, 12:37 IST
   

ಭೋ‍‍ಪಾಲ್‌: ಮಧ್ಯಪ್ರದೇಶ ರಾಜ್ಯದ ರಾಜಕಾರಣ ಮತ್ತೊಂದು ತಿರುವು ಪಡೆದುಕೊಂಡಿದ್ದು ಅವಿಶ್ವಾಸ ನಿರ್ಣಯ ಮಂಡಿಸುವ ಪ್ರಯತ್ನಕ್ಕೆ ಬ್ರೇಕ್ ಬಿದ್ದ ಕಾರಣ ಬಿಜೆಪಿ ಸುಪ್ರೀಂಕೋರ್ಟ್ ಮೊರೆ ಹೋಗಿದೆ.

ಅತಿಶೀಘ್ರದಲ್ಲಿಯೇ ಅವಿಶ್ವಾಸ ನಿರ್ಣಯ ಮಂಡಿಸುವ ಅವಕಾಶ ಪಡೆಯುವುದಾಗಿ ತಿಳಿಸಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಸಿಗಲಿದೆ ಎಂದು ಬಿಜೆಪಿ ವಿಶ್ವಾಸ ವ್ಯಕ್ತಪಡಿಸಿದೆ.

ಕೊರೊನಾ ಸೋಂಕಿನ ಭೀತಿಯ ನಡುವೆಯೂ ಮಧ್ಯಪ್ರದೇಶ ರಾಜಭವನ ಸೋಮವಾರ ಅತ್ಯಂತ ಚಟುವಟಿಕೆಯ ಸ್ಥಳವಾಗಿತ್ತು. ವಿಧಾನಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಬೇಕೆಂದಿದ್ದ ಬಿಜೆಪಿಯ ಪ್ರಯತ್ನವನ್ನು ರಾಜ್ಯಪಾಲರು ಹಾಗೂ ಸ್ಪೀಕರ್ ಜಂಟಿಯಾಗಿ ಅಧಿವೇಶನದಲ್ಲಿ ಪಾಲ್ಗೊಂಡು ವಿಧಾನಸಭೆಯ ಕಲಾಪಗಳನ್ನು ಮಾರ್ಚ್ 26ಕ್ಕೆ ಮುಂದೂಡಿದರು.

ADVERTISEMENT

ಇದರಿಂದಾಗಿ ಮಹತ್ವದ ರಾಜಕೀಯ ಬೆಳವಣಿಗೆ ನಡೆಯುತ್ತದೆ ಎಂದು ಭಾವಿಸಿದ್ದ ಬಿಜೆಪಿಗೆ ನಿರಾಸೆಯಾಗಿದೆ. ಈ ಕಾರಣಕ್ಕಾಗಿ ಸೋಮವಾರವೇ ಶಾಸಕರ ಜೊತೆ ರಾಜಭವನಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ಶಿವರಾಜ್ ಸಿಂಗ್ ಚೌಹಾಣ್ ಸೇರಿದಂತೆ ಹತ್ತು ಜನ ಬಿಜೆಪಿ ಶಾಸಕರು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದು ಶೀಘ್ರದಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ವಿಶ್ವಾಸಮತ ಯಾಚಿಸಲು ಸೂಚಿಸಬೇಕು ಎಂದು ಮನವಿ ಮಾಡಿದ್ದಾರೆ.

ಈಗಾಗಲೇ ಕಾಂಗ್ರೆಸ್‌ ಪಕ್ಷದ 22 ಶಾಸಕರು ರಾಜಿನಾಮೆ ನೀಡಿದ್ದು ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ. ಶೀಘ್ರದಲ್ಲಿ ವಿಶ್ವಾಸಮತಯಾಚನೆ ಆಗದಿದ್ದರೆ ಕುದುರೆ ವ್ಯಾಪಾರ ನಡೆಯುವ ಸಾಧ್ಯತೆಗಳಿವೆ ಎಂದು ಬಿಜೆಪಿ ಅರ್ಜಿಯಲ್ಲಿ ಉಲ್ಲೇಖ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.