ಪ್ರಧಾನಿ ನರೇಂದ್ರ ಮೋದಿ
(ಸಂಗ್ರಹ ಚಿತ್ರ)
ನವದೆಹಲಿ: ಮಹಾ ಕುಂಭಮೇಳವು ದೇಶದಲ್ಲಿ ಏಕತೆಯ ಮನೋಭಾವವನ್ನು ಬಲಪಡಿಸಿದೆ. ಭಾರತದ ಸಾಮರ್ಥ್ಯವನ್ನು ಪ್ರಶ್ನಿಸುವವರಿಗೆ ಇಷ್ಟು ದೊಡ್ಡ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಉತ್ತರವನ್ನು ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ‘ಮಹಾ ಕುಂಭಮೇಳದ ಯಶಸ್ಸು ಉತ್ತರ ಪ್ರದೇಶ ಸರ್ಕಾರ ಮತ್ತು ಸಮಾಜದ ಅಸಂಖ್ಯಾತ ಜನರ ಕೊಡುಗೆಗಳ ಪರಿಣಾಮವಾಗಿದೆ’ ಎಂದು ತಿಳಿಸಿದ್ದಾರೆ.
‘ದೇಶದಲ್ಲಿ ಸುಮಾರು ಒಂದೂವರೆ ತಿಂಗಳ ಕಾಲ ಮಹಾಕುಂಭದ ಉತ್ಸಾಹವನ್ನು ನಾವು ಕಂಡಿದ್ದೇವೆ. ಅನುಕೂಲತೆ ಹಾಗೂ ಅನಾನುಕೂಲತೆಗಳನ್ನು ಮೀರಿ ಲಕ್ಷಾಂತರ ಭಕ್ತರು ಭಕ್ತಿಯಿಂದ ಒಟ್ಟುಗೂಡಿದ ರೀತಿ ನಮ್ಮ ದೊಡ್ಡ ಶಕ್ತಿಯಾಗಿದೆ. ಮಹಾಕುಂಭದ ಅತ್ಯಂತ ಪವಿತ್ರ ಕೊಡುಗೆ ಏಕತೆಯಾಗಿದೆ’ ಎಂದು ಅವರು ಹೇಳಿದ್ದಾರೆ.
‘ಮಹಾಕುಂಭವು ದೇಶದ ಪ್ರತಿಯೊಂದು ಪ್ರದೇಶ ಮತ್ತು ಮೂಲೆ ಮೂಲೆಯಿಂದ ಜನರು ಒಟ್ಟುಗೂಡಿದ ಒಂದು ಕಾರ್ಯಕ್ರಮವಾಗಿತ್ತು. ಜನರು ತಮ್ಮ ಅಹಂಕಾರವನ್ನು ಬದಿಗಿಟ್ಟು ನಾನು ಎಂಬುದರ ಬದಲು ‘ನಾವು’ ಎಂಬ ಭಾವನೆಯೊಂದಿಗೆ ಪ್ರಯಾಗ್ರಾಜ್ನಲ್ಲಿ ಒಟ್ಟುಗೂಡಿದ್ದರು’ ಎಂದು ಅವರು ತಿಳಿಸಿದ್ದಾರೆ.
‘ವಿವಿಧತೆಯಲ್ಲಿ ಏಕತೆ ಭಾರತದ ವಿಶೇಷತೆ ಎಂದು ನಾವು ಯಾವಾಗಲೂ ಹೇಳಿದ್ದೇವೆ. ಪ್ರಯಾಗ್ರಾಜ್ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಅದರ ಭವ್ಯ ಸ್ವರೂಪವನ್ನು ನಾವು ಅನುಭವಿಸಿದ್ದೇವೆ. ವೈವಿಧ್ಯತೆಯಲ್ಲಿ ಏಕತೆಯ ವೈಶಿಷ್ಟ್ಯವನ್ನು ಶ್ರೀಮಂತಗೊಳಿಸುವುದು ಮತ್ತು ಮುಂದುವರಿಸುವುದು ನಮ್ಮ ಜವಾಬ್ದಾರಿಯಾಗಿದೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.