ADVERTISEMENT

ಮಹದಾಯಿ ಅಧಿಸೂಚನೆ ಕೇಂದ್ರ ಸರ್ಕಾರಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2020, 19:56 IST
Last Updated 26 ಫೆಬ್ರುವರಿ 2020, 19:56 IST

ನವದೆಹಲಿ: ಮಹದಾಯಿ ಜಲವಿವಾದ ನ್ಯಾಯಮಂಡಳಿಯ ಐತೀರ್ಪನ್ನು ಆಧರಿಸಿ ಸುಪ್ರೀಂ ಕೋರ್ಟ್‌ ನಿರ್ದೇಶನದ ಮೇರೆಗೆ ಕೂಡಲೇ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ.

ಕೇಂದ್ರದ ಜಲಶಕ್ತಿ ಸಚಿವ ಗಜೇಂದ್ರಸಿಂಗ್‌ ಶೆಖಾವತ್ ಅವರಿಗೆ ಬುಧವಾರ ಈ ಕುರಿತ ಮನವಿ ಸಲ್ಲಿಸಿರುವ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ನೇತೃತ್ವದ ರಾಜ್ಯ ನಿಯೋಗ, ಮಹದಾಯಿ, ಮೇಕೆದಾಟು ಮತ್ತು ಕೃಷ್ಣಾ ಯೋಜನೆಗಳ ಕುರಿತು ಚರ್ಚಿಸಿತು.

ಮಹದಾಯಿ ಅಧಿಸೂಚನೆಗೆ ಗೋವಾ ಸರ್ಕಾರ ಸಮ್ಮತಿ ಸೂಚಿಸಿದ್ದು, ಕಳಸಾ– ಬಂಡೂರಿ ತಿರುವು ಯೋಜನೆ ಕಾಮಗಾರಿಗೆ ಒಪ್ಪಿಗೆ ನೀಡದಂತೆ ಕೋರಿದೆ. ರಾಜ್ಯ ಸರ್ಕಾರವು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಬೇಕಿದ್ದು, ಅಧಿಸೂಚನೆ ಹೊರಡಿಸಿದರೆ ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಭೇಟಿಯ ನಂತರ ಸುದ್ದಿಗಾರರಿಗೆ ತಿಳಿಸಿದರು.

ADVERTISEMENT

ಮಹದಾಯಿ ಐತೀರ್ಪು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಗಳ ವಿಚಾರಣೆಯನ್ನು ಜುಲೈ 14ರಿಂದ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ. ಅಧಿಸೂಚನೆ ಹೊರಡಿಸಲು ಯಾವುದೇ ಅಡ್ಡಿ ಇಲ್ಲ ಎಂಬ ವಿಷಯವನ್ನೂ ತಿಳಿಸಲಾಗಿದೆ ಎಂದು ಅವರು ವಿವರಿಸಿದರು.

ರಾಜ್ಯ ಸರ್ಕಾರ ಕೈಗೆತ್ತಿಕೊಳ್ಳಲಿರುವ ಮೇಕೆದಾಟು ಯೋಜನೆ ಹಾಗೂ ಕೃಷ್ಣಾ ನದಿ ನೀರು ಹಂಚಿಕೆ ಮಾಡಿ ನ್ಯಾಯಮಂಡಳಿ ನೀಡಿರುವ ಐತೀರ್ಪಿನ ಕುರಿತು ಶೆಖಾವತ್‌ ಅವರೊಂದಿಗೆ ಚರ್ಚಿಸಲಾಗಿದೆ ಎಂದರು.

ಸಚಿವರಾದ ಜಗದೀಶ ಶೆಟ್ಟರ್‌, ಸಂಸದ ಶಿವಕುಮಾರ್‌ ಉದಾಸಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.