ಮುಂಬೈ: ಮಹಾರಾಷ್ಟ್ರ–ಕರ್ನಾಟಕ ಗಡಿ ವಿವಾದದ ಕುರಿತು ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿರುವ ವಿಚಾರಣೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರವು ಹಿರಿಯ ವಕೀಲ ಹರೀಶ್ ಸಾಳ್ವೆ ಅವರ ಸಲಹೆ ಪಡೆದಿದೆ.
‘ಗಡಿ ವಿಚಾರವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಹರೀಶ್ ಸಾಳ್ವೆ ಅವರನ್ನು ಸಂಪರ್ಕಿಸಿದ್ದು, ಅವರು ನಮ್ಮ ಪರವಾಗಿ ಸುಪ್ರೀಂ ಕೋರ್ಟ್ನಲ್ಲಿ ಹಾಜರಾಗುವ ನಿರೀಕ್ಷೆ ಇದೆ’ ಎಂದು ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಭಾನುವಾರ ಔರಂಗಾಬಾದ್ನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ನಾಗಪುರದಲ್ಲಿ ನಡೆದಿದ್ದ ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಗಡಿ ವಿಚಾರವು ಪ್ರತಿಧ್ವನಿಸಿತ್ತು.
ಗಡಿ ಬಿಕ್ಕಟ್ಟನ್ನು ಪರಿಹರಿಸುವ ಸಲುವಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಡಿಸೆಂಬರ್ನಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕದ ನಾಯಕತ್ವದೊಂದಿಗೆ ಮಾತುಕತೆ ನಡೆಸಿದ ಬಳಿಕ, ರಾಜ್ಯದ ಪರವಾಗಿ ಸುಪ್ರೀಂ ಕೋರ್ಟ್ನಲ್ಲಿ ವಾದಿಸಲು ಹರೀಶ್ ಸಾಳ್ವೆ ಅವರನ್ನು ನೇಮಿಸುವಂತೆ ವಿರೋಧ ಪಕ್ಷ ಮಹಾ ವಿಕಾಸ ಅಘಾಡಿಯು ಶಿಂದೆ–ಫಡಣವೀಸ್ ನೇತೃತ್ವದ ಸರ್ಕಾರವನ್ನು ಒತ್ತಾಯಿಸಿತ್ತು.
ಗಡಿ ವಿಚಾರದಲ್ಲಿ ಸಾಳ್ವೆ ಅವರು ಈ ಹಿಂದೆ ಸರ್ಕಾರಕ್ಕೆ ಸಲಹೆ ನೀಡಿದ್ದನ್ನೂ ವಿರೋಧ ಪಕ್ಷ ಉಲ್ಲೇಖಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.