ADVERTISEMENT

ಮುಂಬೈ | ಟಿವಿ ಸಂದರ್ಶನದಲ್ಲಿ ದಲಿತ ಪದ ಬಳಕೆ; ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌

ಪಿಟಿಐ
Published 7 ಆಗಸ್ಟ್ 2023, 16:09 IST
Last Updated 7 ಆಗಸ್ಟ್ 2023, 16:09 IST
ನಿತೇಶ್‌ ರಾಣೆ (ಪಿಟಿಐ ಚಿತ್ರ)
ನಿತೇಶ್‌ ರಾಣೆ (ಪಿಟಿಐ ಚಿತ್ರ)   

ಮುಂಬೈ : ಸುದ್ದಿ ವಾಹಿನಿಯೊಂದರ ಸಂದರ್ಶನ ವೇಳೆ ‘ದಲಿತ’ ಪದ ಬಳಕೆ ಮಾಡಿದ ಆರೋಪದ ಮೇಲೆ ಮಹಾರಾಷ್ಟ್ರದ ಬಿಜೆಪಿ ಶಾಸಕ ನಿತೇಶ್ ರಾಣೆ ವಿರುದ್ಧ ನವ ಮುಂಬೈ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ವಕೀಲರೊಬ್ಬರು ನೀಡಿದ ದೂರಿನನ್ವಯ ನಿತೇಶ್‌ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

‘ಸ್ಥಳೀಯ ಸುದ್ದಿ ವಾಹಿನಿಯೊಂದು ನಡೆಸಿದ ಸಂದರ್ಶನದಲ್ಲಿ ಕಂಕವಲಿ ಕ್ಷೇತ್ರದ ಬಿಜೆಪಿ ಶಾಸಕ ನಿತೇಶ್‌ ರಾಣೆ ‘ದಲಿತ’ ಪದ ಬಳಕೆ ಮಾಡಿದ್ದಾರೆ. ದಲಿತ ಪದ ಬಳಕೆಯನ್ನು ಕೇಂದ್ರ ಸರ್ಕಾರವು ಆಗಸ್ಟ್ 7, 2018 ರಂದು ನಿಷೇಧಿಸಿತ್ತು. ಇಷ್ಟಾದರೂ ಶಾಸಕ ನಿತೇಶ್ ರಾಣೆ ಪದ ಬಳಕೆ ಮಾಡಿದ್ದಾರೆ’ ಎಂದು ವಕೀಲರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

‘ಶಾಸಕರ ವಿರುದ್ಧ ಐಪಿಸಿ ಸೆಕ್ಷನ್‌ 153 ಎ (ಧರ್ಮ, ಜನಾಂಗ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 153 ಬಿ (ರಾಷ್ಟ್ರೀಯ ಏಕೀಕರಣಕ್ಕೆ ಹಾನಿಕರವಾದ ಸಮರ್ಥನೆಗಳು), 295 ಎ (ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಅಲ್ಲದೇ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲೂ ಪ್ರಕರಣ ದಾಖಲಾಗಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.