ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್
ಮುಂಬೈ: ಲವ್ ಜಿಹಾದ್ ಮತ್ತು ಬಲವಂತದ ಮತಾಂತರ ವಿರುದ್ಧ ಹೊಸ ಕಾನೂನು ರೂಪಿಸಲು ಮುಂದಾಗಿರುವ ಮಹಾರಾಷ್ಟ್ರ ಸರ್ಕಾರ, ಈ ಸಂಬಂಧ ಕಾನೂನು ಅಂಶಗಳನ್ನು ಅಧ್ಯಯನ ಮಾಡಲು ರಾಜ್ಯ ಪೊಲೀಸ್ ಮಹಾನಿರ್ದೇಶಕರ ನೇತೃತ್ವದಲ್ಲಿ ಏಳು ಸದಸ್ಯರ ಸಮಿತಿಯನ್ನು ರಚಿಸಿದೆ.
ಸಮಿತಿಯು ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಅಲ್ಪಸಂಖ್ಯಾತರ ಆಯೋಗ, ಕಾನೂನು ಮತ್ತು ನ್ಯಾಯಾಂಗ, ಸಾಮಾಜಿಕ ನ್ಯಾಯ ಮತ್ತು ವಿಶೇಷ ನೆರವು ಇಲಾಖೆಗಳ ಕಾರ್ಯದರ್ಶಿಗಳು ಹಾಗೂ ಗೃಹ ಇಲಾಖೆಯ ಉಪ ಕಾರ್ಯದರ್ಶಿಗಳನ್ನು ಒಳಗೊಂಡಿದೆ.
ಸಮಿತಿಯು ರಾಜ್ಯದ ಸದ್ಯದ ಪರಿಸ್ಥಿತಿಯನ್ನು ಅಧ್ಯಯನ ಮಾಡಲಿದ್ದು, ಲವ್ ಜಿಹಾದ್ ಮತ್ತು ಬಲವಂತದ ಮತಾಂತರದ ದೂರುಗಳನ್ನು ನಿಭಾಯಿಸುವ ಬಗ್ಗೆ ಸೂಚನೆಗಳನ್ನು ನೀಡಲಿದೆ ಎಂದು ಶುಕ್ರವಾರ ತಡರಾತ್ರಿ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ಇದಲ್ಲದೇ ಸಮಿತಿಯು ಇತರ ರಾಜ್ಯಗಳ ಕಾನೂನುಗಳನ್ನು ಪರಿಶೀಲಿಸಲಿದ್ದು, ಲವ್ ಜಿಹಾದ್ ಮತ್ತು ಬಲವಂತದ ಮತಾಂತರ ತಡೆಗಟ್ಟುವ ಬಗ್ಗೆ ಸಲಹೆಗಳನ್ನು ನೀಡಲಿದೆ ಎಂದು ತಿಳಿಸಿದೆ
‘ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು ನಮ್ಮ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಿದೆ’ ಎಂದು ಸಚಿವ, ಹಿರಿಯ ಬಿಜೆಪಿ ನಾಯಕ ಮಂಗಲ್ ಪ್ರಭಾತ್ ಲೋಧಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.