ಮುಂಬೈ/ಚಂಡೀಗಡ:ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ.
ಮಹಾರಾಷ್ಟ್ರದಲ್ಲಿ 14 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿಯಲ್ಲಿಯೂ ಕೆಲ ಪ್ರಭಾವಿಗಳ ಹೆಸರು ಕೈಬಿಡಲಾಗಿದೆ.ಸಚಿವರಾದ ಏಕನಾಥ ಖಡಸೆ, ವಿನೋದ್ ತಾವ್ಡೆ ಹಾಗೂ ಪ್ರಕಾಶ್ ಮೆಹ್ತಾಅವರ ಹೆಸರು ಪಟ್ಟಿಯಲ್ಲಿಲ್ಲ. ಇವರಿಗೆ ಎರಡನೇ ಪಟ್ಟಿಯಲ್ಲಿ ಸ್ಥಾನ ಸಿಗಬಹುದು ಎಂದೇ ಹೇಳಲಾಗಿತ್ತು. ಇದರಿಂದ ಪಕ್ಷದಲ್ಲಿ ಭಿನ್ನಮತ ಎದುರಾಗುವ ಸಾಧ್ಯತೆ ಇದೆ.ಮರಾಠ ಸಮುದಾಯದ ತಾವ್ಡೆ ಅವರು ಹಿಂದೆ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯೂ ಆಗಿದ್ದರು.ಪ್ರಕಾಶ್ ಮೆಹತಾ ಅವರುಮಹಾರಾಷ್ಟ್ರದಲ್ಲಿ ಬಿಜೆಪಿಯ ಗುಜರಾತಿ ಸಮುದಾಯದ ಪ್ರತಿನಿಧಿಯಾಗಿದ್ದಾರೆ.
ಇದನ್ನೂ ಓದಿ:ಮಹಾರಾಷ್ಟ್ರ: ಬಿಜೆಪಿ ಪಟ್ಟಿ ಜತೆಗೇ ಅತೃಪ್ತಿಯ ಅಲೆ
125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಸೋಮವಾರ ಬಿಡುಗಡೆ ಮಾಡಿತ್ತು. ಇದೀಗ ಎರಡನೇ ಪಟ್ಟಿ ಬಿಡುಗಡೆಯಾಗುವುದರೊಂದಿಗೆ, 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಬಿಜೆಪಿ ಈವರೆಗೆ 139 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದಂತಾಗಿದೆ.
ಹರಿಯಾಣದಲ್ಲಿ 12 ಮಂದಿಗೆ ಟಿಕೆಟ್ ನೀಡಲಾಗಿದ್ದು, ಪಕ್ಷದ ರಾಜ್ಯ ಘಟಕದ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಸೊನಾಲಿ ಪೋಗಟ್ ಅದಮಾಪುರ್ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಮೊದಲ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದ್ದ ಬಿಜೆಪಿಯು 78 ಅಭ್ಯರ್ಥಿಗಳ ಹೆಸರು ಪ್ರಕಟಿಸಿತ್ತು. ರಾಜ್ಯ ವಿಧಾನಸಭೆ ಒಟ್ಟು 90 ಸ್ಥಾನಗಳನ್ನು ಹೊಂದಿದೆ.
ಉಭಯ ರಾಜ್ಯಗಳಲ್ಲಿ ಇದೇ 21ಕ್ಕೆ ಚುನಾವಣೆ ನಡೆಯಲಿದ್ದು, 24ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.