ADVERTISEMENT

ಏಕನಾಥ್ ಶಿಂದೆ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ: ಉದ್ಧವ್ ಠಾಕ್ರೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಡಿಸೆಂಬರ್ 2022, 1:56 IST
Last Updated 6 ಡಿಸೆಂಬರ್ 2022, 1:56 IST
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ   

ಮುಂಬೈ: ಛತ್ರಪತಿ ಶಿವಾಜಿ ಮಹಾರಾಜರ ಕುರಿತು ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ ಅವರ ಹೇಳಿಕೆಮತ್ತು ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಏಕನಾಥ್ ಶಿಂದೆ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ವಿರೋಧ ಪಕ್ಷಗಳ ಒಕ್ಕೂಟ ಮಹಾರಾಷ್ಟ್ರ ವಿಕಾಸ ಆಘಾಡಿ (ಎಂವಿಎ) ಹೇಳಿದೆ.

ಸೋಮವಾರ ತಡ ರಾತ್ರಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿಉದ್ಧವ್ ಠಾಕ್ರೆ ಅವರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಘೋಷಣೆ ಮಾಡಿದರು.ಡಿಸೆಂಬರ್ 17ರಂದು ಇಲ್ಲಿನ ಜೀಜಾ ಮಾತಾ ಉದ್ಯಾನವನದಿಂದ ಆಜಾದ್‌ ಮೈದಾನದವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಲಾಗುವುದು ಎಂದು ಹೇಳಿದರು.

ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ ಅವರು ಛತ್ರಪತಿ ಶಿವಾಜಿ ಮಹಾರಾಜರ ಕುರಿತು ಮಾತನಾಡಿರುವುದು ಸರಿಯಲ್ಲ ಅವರನ್ನು ಕೇಂದ್ರಕ್ಕೆ ವಾಪಸ್ಸು ಕಳುಹಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಉದ್ಧವ್ ಠಾಕ್ರೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕರ್ನಾಟಕದ ಮುಖ್ಯಮಂತ್ರಿಗಳು ನಮ್ಮ ರಾಜ್ಯದ ಹಲವು ಪ್ರದೇಶಗಳನ್ನು ಕೇಳುತ್ತಾರೆ.ಆದರೆ ನಮ್ಮ ಮುಖ್ಯಮಂತ್ರಿಗಳು ಇದನ್ನು ಕೇಳಿಸಿಕೊಂಡು ಮೌನವಾಗಿದ್ದಾರೆ ಆಗಾದರೆ ಇಲ್ಲಿ ಇರುವುದು ಬಿಜೆಪಿ ಸರ್ಕಾರವೇ ಎಂದು ಪ್ರಶ್ನೆ ಮಾಡಿದ್ದಾರೆ.

ಮಹಾರಾಷ್ಟ್ರವನ್ನು ಪ್ರೀತಿಸುವ ಎಲ್ಲ ಜನರು ಒಂದಾಗಿ ಈ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ಕಾಲ ಬಂದಿದೆ. ನಮ್ಮ ರಾಜ್ಯವನ್ನು ಅವಮಾನಿಸುವ ಪ್ರಯತ್ನಗಳು ನಡೆಯುತ್ತಿವೆ. ಆದ್ದರಿಂದ ನಾವು ಈ ಆಂದೋಲನ ಮಾಡುತ್ತಿದ್ದೇವೆ ಎಂದು ಉದ್ದವ್‌ ಠಾಕ್ರೆ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಸಿಪಿ ಪಕ್ಷದ ನಾಯಕರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.