ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರ ವಿರುದ್ಧ ಟ್ವಿಟರ್ನಲ್ಲಿ ಆಕ್ಷೇಪಾರ್ಹ ಹೇಳಿಕೆ ಪೋಸ್ಟ್ ಮಾಡಿದ್ದ ಆರೋಪದ ಮೇಲೆ 29 ವರ್ಷ ವಯಸ್ಸಿನ ಪಿಎಚ್ಡಿ ವಿದ್ಯಾರ್ಥಿಯನ್ನು ರಾಜ್ಯದ ಸೈಬರ್ ಘಟಕದ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಅಪರಿಚಿತ ವ್ಯಕ್ತಿಯೊಬ್ಬ ಟ್ವಿಟರ್ ಖಾತೆಯೊಂದರಿಂದ ಆಕ್ಷೇಪಾರ್ಹ ಹೇಳಿಕೆಗಳನ್ನು ಪೋಸ್ಟ್ ಮಾಡುತ್ತಿರುವುದಾಗಿ ಸೈಬರ್ ಘಟಕಕ್ಕೆ ದೂರು ಬಂದಿತ್ತು. ಆ ಖಾತೆಯಲ್ಲಿ ಮಹಿಳೆಯರು ಮತ್ತು ಪತ್ರಕರ್ತೆಯರ ವಿರುದ್ಧವೂ ಆಕ್ಷೇಪಾರ್ಹವಾಗಿ ಟೀಕೆಗಳನ್ನು ಮಾಡಲಾಗಿತ್ತು. ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳುವ ಸಲುವಾಗಿ ವೈ–ಫೈ–ವಿಪಿಎನ್ಅನ್ನು ಬಳಸಿ ಆತ ಮುಂಬೈ ನಿವಾಸಿ ಎಂಬಂತೆ ಬಿಂಬಿಸಿಕೊಂಡಿದ್ದ. ಆತ ಮಾಡಿದ್ದ ಟ್ವೀಟ್ಗಳನ್ನು ತಾಂತ್ರಿಕ ವಿಶ್ಲೇಷಣೆಗೆ ಒಳಪಡಿಸಿದಾಗ ಆರೋಪಿಯು ರಾಹುರಿಯ ಮಹಾತ್ಮ ಫುಲೆ ಕೃಷಿ ಕಾಲೇಜಿನ ವಿದ್ಯಾರ್ಥಿ ಎಂದು ತಿಳಿದುಬಂದಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆತನನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಆತನನ್ನು ನವೆಂಬರ್ 2ರ ವರೆಗೆ ಪೊಲೀಸ್ ವಶಕ್ಕೆ ನೀಡಿದೆ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.