ಮುಂಬೈ (ಪಿಟಿಐ): ರಾತ್ರಿ ಬೆಳಗಾಗುವುದರೊಳಗೆ ಮಹಾರಾಷ್ಟ್ರದ ರಾಜಕಾರಣದಲ್ಲಿ ಬೆರಗುಗೊಳಿಸುವ ಬೆಳವಣಿಗೆಯಾಗಿದೆ.
ಶಿವಸೇನಾ– ಕಾಂಗ್ರೆಸ್–ಎನ್ಸಿಪಿ ಮೈತ್ರಿಯು ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಸರ್ಕಾರ ರಚಿಸುವುದಾಗಿ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಬಿಜೆಪಿಯ ದೇವೇಂದ್ರ ಫಡಣವೀಸ್ ಮುಖ್ಯಮಂತ್ರಿಯಾಗಿ ಮತ್ತು ಎನ್ಸಿಪಿ ಶಾಸಕಾಂಗ ಪಕ್ಷದ ನಾಯಕ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ಶನಿವಾರ ಮುಂಜಾನೆ 7.30ಕ್ಕೆ ನಡೆದ ತರಾತುರಿಯ ಕಾರ್ಯಕ್ರಮದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಪ್ರಮಾಣವಚನ ಬೋಧಿಸಿದರು. ಇದಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ‘ಬಿಜೆಪಿಯನ್ನು ಬೆಂಬಲಿಸುವ ಅಜಿತ್ ಪವಾರ್ ಅವರ ನಿರ್ಧಾರ ಪಕ್ಷದ ತೀರ್ಮಾನವಲ್ಲ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದರು.
‘ಮಹಾರಾಷ್ಟ್ರದಲ್ಲಿ ನಡೆದ ಬೆಳವಣಿಗೆ ಭಾರತದ ಇತಿಹಾಸದಲ್ಲಿ ಕಪ್ಪು ಅಧ್ಯಾಯವಾಗಿ ಉಳಿಯಲಿದೆ’ ಎಂದು ಕಾಂಗ್ರೆಸ್ ಟೀಕಿಸಿದೆ. ‘ಕೇಂದ್ರ ಸರ್ಕಾರ ಮಹಾರಾಷ್ಟ್ರದ ಮೇಲೆ ನಿರ್ದಿಷ್ಟ ದಾಳಿ ನಡೆಸಿದೆ’ ಎಂದು ಶಿವಸೇನಾ ಆರೋಪಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.