ಮುಂಬೈ: ಮಹಾರಾಷ್ಟ್ರದಲ್ಲಿ ಸತತವಾಗಿ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ಪ್ರವಾಹ ಹಾಗೂ ಭೂಕುಸಿತ ಉಂಟಾಗಿ ಮೃತಪಟ್ಟವರ ಸಂಖ್ಯೆ 213ಕ್ಕೆ ಏರಿಕೆಯಾಗಿದೆ.
ಪ್ರವಾಹಕ್ಕೆ ಸಿಲುಕಿ ನಾಪತ್ತೆಯಾದವರಲ್ಲಿ ಎಂಟು ಮಂದಿ ಇನ್ನೂ ಪತ್ತೆಯಾಗಿಲ್ಲ.
ಜುಲೈ 20ರಿಂದ ಸುರಿದ ನಿರಂತರ ಮಳೆಯಿಂದಾಗಿ ರಾಯ್ಗಡ ಜಿಲ್ಲೆಯಲ್ಲಿ 95, ಸಾತಾರಾ ಜಿಲ್ಲೆಯಲ್ಲಿ 46, ರತ್ನಗಿರಿ ಜಿಲ್ಲೆಯಲ್ಲಿ 35, ಥಾಣೆ ಜಿಲ್ಲೆಯಲ್ಲಿ 15, ಕೊಲ್ಹಾಪುರ ಜಿಲ್ಲೆಯಲ್ಲಿ 7, ಮುಂಬೈ ನಗರದಲ್ಲಿ 4, ಪುಣೆಯಲ್ಲಿ 3, ಸಿಂಧುದುರ್ಗ್ನಲ್ಲಿ 4 ಮತ್ತು ಪೂರ್ವ ಮಹಾರಾಷ್ಟ್ರದ ವಾರ್ಧಾ ಮತ್ತು ಅಕೋಲಾ ಜಿಲ್ಲೆಗಳಲ್ಲಿ ತಲಾ ಇಬ್ಬರು ಮೃತಪಟ್ಟಿದ್ದಾರೆ ಎಂದು ವಿಪತ್ತು ನಿರ್ವಹಣಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಎಂಟು ಮಂದಿ ಇನ್ನೂ ಕಾಣೆಯಾಗಿದ್ದಾರೆ. ಗಾಯಗೊಂಡ 52 ಮಂದಿ ವಿವಿಧ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೂನ್ 1ರಿಂದ ಮಹಾರಾಷ್ಟ್ರದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ 300 ಜನರು ಸಾವನ್ನಪ್ಪಿದ್ದಾರೆ. ಪ್ರವಾಹದಿಂದ ಒಟ್ಟು 61,280 ವಿವಿಧ ಪ್ರಾಣಿಗಳು ಸಾವನ್ನಪ್ಪಿವೆ ಎಂದು ಹೇಳಲಾಗಿದೆ.
ಸಾಂಗ್ಲಿ ಜಿಲ್ಲೆಯಲ್ಲಿ 2,11,808 ಜನರನ್ನು ಸೇರಿದಂತೆ ಇದುವರೆಗೆ ಒಟ್ಟು 4,35,879 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ವಿಪತ್ತು ನಿರ್ವಹಣಾ ಇಲಾಖೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.