ADVERTISEMENT

ಕಾಶ್ಮೀರಿ ಪಂಡಿತ ಸಮುದಾಯದ ಇಂದಿನ ಪರಿಸ್ಥಿತಿಗೆ ಬಿಜೆಪಿಯೇ ಕಾರಣ: ಖರ್ಗೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2023, 15:41 IST
Last Updated 10 ಜನವರಿ 2023, 15:41 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ನವದೆಹಲಿ (ಪಿಟಿಐ): ಬಿಜೆಪಿಯ ‘ಬಳಸು, ಅಲಕ್ಷಿಸು ಮತ್ತು ವಂಚಿಸು’ ನೀತಿಯೇ ಕಾಶ್ಮೀರಿ ಪಂಡಿತ ಸಮುದಾಯದ ಉದ್ಯೋಗಿಗಳ ಇಂದಿನ ಪರಿಸ್ಥಿತಿಗೆ ಕಾರಣ’ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಈ ಸಮುದಾಯದ ಉದ್ಯೋಗಿಗಳು ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಅವರು ಹೀಗೆ ಹೇಳಿದ್ದಾರೆ. ‘ಬದುಕುವ ಹಕ್ಕು ಮತ್ತು ಸ್ಥಳಾಂತರಕ್ಕೆ ಆಗ್ರಹಿಸಿ ಕಾಶ್ಮೀರಿ ಪಂಡಿತ ಸಮುದಾಯದ ಉದ್ಯೋಗಿಗಳು 245ಕ್ಕೂ ಹೆಚ್ಚು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ವೇತನವನ್ನು ಹಲವಾರು ತಿಂಗಳಿಂದ ತಡೆಹಿಡಿಯಲಾಗಿದೆ ಮತ್ತು ಅವರ ಭದ್ರತೆ ಜೊತೆ ರಾಜಿ ಮಾಡಿಕೊಳ್ಳಲಾಗಿದೆ’ ಎಂದು ಖರ್ಗೆ ಅವರು ಟ್ವೀಟ್‌ ಮಾಡಿದ್ದಾರೆ.

ರಾಹುಲ್‌ ಭಟ್‌ ಎಂಬ ಕಾಶ್ಮೀರಿ ಪಂಡಿತ ಸಮುದಾಯದ ಉದ್ಯೋಗಿಯನ್ನು ರಾಜ್ಯದ ಬುಡ್ಗಾಮ್ ಜಿಲ್ಲೆಯ ಅವರ ಕಚೇರಿಯಲ್ಲಿ ಉಗ್ರರು ಗುಂಡಿಕ್ಕಿ ಹತ್ಯೆಗೈದಿದ್ದ ಘಟನೆ ಕಳೆದ ವರ್ಷ ಮೇನಲ್ಲಿ ನಡೆದಿತ್ತು. ಈ ಹತ್ಯೆ ಹಿನ್ನೆಲೆಯಲ್ಲಿ ಈ ಸಮುದಾಯದ ಉದ್ಯೋಗಿಗಳು ತಮ್ಮನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.