ಕೋಲ್ಕತ್ತ: ಈಚೆಗೆ ನಡೆದ ವಿಧಾನಸಭಾ ಚುನಾವಣೆಯನ್ನು ಪಕ್ಷಕ್ಕೆ ಭಾರಿ ಬಹುಮತವನ್ನು ತಂದುಕೊಟ್ಟ ಟಿಎಂಸಿ ಶಾಸಕಾಂಗ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಅವರು ಸತತ ಮೂರನೇ ಬಾರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಜಗದೀಪ್ ಧನಕರ್ ಅವರು ಮಮತಾ ಅವರಿಗೆ ಪ್ರಮಾಣವಚನ ಬೋಧಿಸಿದರು.ಕೋವಿಡ್ ಕಾರಣಕ್ಕಾಗಿ ಕಾರ್ಯಕ್ರಮವನ್ನು ಸರಳವಾಗಿ ಏರ್ಪಡಿಸಲಾಗಿತ್ತು. ಪಕ್ಷದ ಮುಖಂಡರಾದ ಸುಬ್ರತಾ ಮುಖರ್ಜಿ, ಪಾರ್ಥ ಚಟರ್ಜಿ, ಪಕ್ಷದ ಗೆಲುವಿಗೆ ಕಾರ್ಯತಂತ್ರರೂಪಿಸಿದ ಪ್ರಶಾಂತ್ ಕಿಶೋರ್ ಸೇರಿದಂತೆ ಕೆಲವರಷ್ಟೇ ಉಪಸ್ಥಿತರಿದ್ದರು.
ಬಳಿಕ ಮಾತನಾಡಿದ ಮಮತಾ, ’ಕೋವಿಡ್ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆಯನ್ನು ಕಾಪಾಡಲು ಗಮನಹರಿಸುತ್ತೇನೆ. ಚುನಾವಣಾ ಆಯೋಗದ ನಿರ್ದೇಶನದಂತೆ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದ ಕಾರಣ ಹಿಂಸಾಚಾರಗಳು ಸಂಭವಿಸಿವೆ. ಇನ್ನು ಮುಂದೆ ಇದಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಅವರು ಹೇಳಿದರು.
ಮೋದಿ ಅಭಿನಂದನೆ: ಮಮತಾ ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.