ADVERTISEMENT

ಉಪಚುನಾವಣೆ ಪ್ರಚಾರದ ವೇಳೆ ಮಮತಾರಿಂದ ಕೋವಿಡ್‌ ನಿಯಮ ಉಲ್ಲಂಘನೆ: ಬಿಜೆಪಿ ಆರೋಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಸೆಪ್ಟೆಂಬರ್ 2021, 14:26 IST
Last Updated 16 ಸೆಪ್ಟೆಂಬರ್ 2021, 14:26 IST
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ   

ಕೋಲ್ಕತ್ತ: ಭವಾನಿಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ಪ್ರಚಾರದ ವೇಳೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೋವಿಡ್‌ ನಿಯಮ ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಈ ಕುರಿತು ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಬಿಜೆಪಿ ಮುಖಂಡ ಸಜಲ್‌ ಘೋಷ್‌, 'ಭವಾನಿಪುರದ ಗುರುದ್ವಾರಕ್ಕೆ ಭೇಟಿ ನೀಡಿದ ವೇಳೆ ಮಮತಾ ಬ್ಯಾನರ್ಜಿ ಅವರು ಕೋವಿಡ್ ಮಾರ್ಗಸೂಚಿ ಮತ್ತು ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ' ಎಂದು ಆರೋಪಿಸಿದ್ದಾರೆ.

ಬಿಜೆಪಿಯ ಆರೋಪವು ಆಧಾರರಹಿತ ಮತ್ತು ರಾಜಕೀಯ ಪ್ರೇರಿತವಾಗಿದೆ ಎಂದು ಟಿಎಂಸಿ ತಿರುಗೇಟು ನೀಡಿದೆ.

ADVERTISEMENT

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಅವರು ಸುವೇಂದು ಅಧಿಕಾರಿ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು.ಈ ಹಿನ್ನೆಲೆಯಲ್ಲಿ ಮಮತಾ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಭವಾನಿಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ.

2011 ಮತ್ತು 2016ರ ವಿಧಾನಸಭೆ ಚುನಾವಣೆಗಳಲ್ಲಿ ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಮತಾ ಗೆಲುವು ಸಾಧಿಸಿದ್ದರು. ಸೆ.30ರಂದು ನಡೆಯುತ್ತಿರುವ ಉಪಚುನಾವಣೆಯಲ್ಲಿ ಮಮತಾ ವಿರುದ್ಧ ಅಭ್ಯರ್ಥಿಯನ್ನು ಹಾಕದಿರಲು ಕಾಂಗ್ರೆಸ್‌ ನಿರ್ಧರಿಸಿದೆ. ಅಕ್ಟೋಬರ್‌ 3ರಂದು ಫಲಿತಾಂಶ ಪ್ರಕಟವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.