ಕೋಲ್ಕತ್ತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದ್ವಂದ್ವ ನಿಲುವು ಹೊಂದಿದ್ದಾರೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಟೀಕಿಸಿದ್ದಾರೆ.
ಸಾಲ್ಟ್ಲೇಕ್ನಲ್ಲಿ ತೆರೆಯಲಾಗಿರುವ ಪಕ್ಷದ ನೂತನ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ರಾಹುಲ್ ಗಾಂಧಿಯವರನ್ನು ಬೆಳಗ್ಗೆ ಆಶಿರ್ವಾದ ಮಾಡಿರುವ ಮಮತಾ, ಸಂಜೆ ವೇಳೆಗೆ ಟೀಕಾಪ್ರಹಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆಯೂ ಆಗಿರುವ ಮಮತಾ ಅವರು, ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡಿರುವ ರಾಹುಲ್ ಗಾಂಧಿಯವರಿಗೆ ಬೆಂಬಲ ಸೂಚಿಸಿದ್ದರು. ಈ ಬಗ್ಗೆ ಮಾತನಾಡಿರುವ ಸಂಬಿತ್, 'ಅವರು (ಮಮತಾ) ರಾಹುಲ್ ಗಾಂಧಿಯವರಿಗೆ ಬೆಳಗ್ಗೆ ಪುಷ್ಪಗುಚ್ಚ ಕಳುಹಿಸಿ, ಆಶಿರ್ವಾದ ಮಾಡಿದ್ದರು. ಆದರೆ, ಸಂಜೆ ಹೊತ್ತಿಗೆ ರಾಹುಲ್ ವಿರುದ್ಧ ಮಾತನಾಡಿದ್ದಾರೆ' ಎಂದು ವ್ಯಂಗ್ಯವಾಡಿದ್ದಾರೆ.
ರಾಹುಲ್ ಗಾಂಧಿಯವರನ್ನು ಲೋಕಸಭೆ ಸದಸ್ಯತ್ವದಿಂದ ಮಾರ್ಚ್ 26ರಂದು ಅನರ್ಹಗೊಳಿಸಿದ್ದನ್ನು ವಿರೋಧಿಸಿದ್ದ ಮಮತಾ, 'ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನವ ಭಾರತದಲ್ಲಿ ವಿರೋಧ ಪಕ್ಷಗಳು ಬಿಜೆಪಿಯ ಪ್ರಧಾನ ಗುರಿಯಾಗಿವೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
'ಕ್ರಿಮಿನಲ್ ಹಿನ್ನೆಲೆಯ ಬಿಜೆಪಿ ನಾಯಕರು ಸಂಪುಟವನ್ನು ಸೇರುತ್ತಿರುವ ಹೊತ್ತಿನಲ್ಲಿ, ವಿರೋಧ ಪಕ್ಷದ ನಾಯಕರುಗಳು ಮಾತನಾಡಿದ್ದಕ್ಕಾಗಿ ಅನರ್ಹಗೊಳ್ಳುತ್ತಿದ್ದಾರೆ. ನಮ್ಮ ಸಾಂವಿಧಾನಿಕ ಪ್ರಜಾಪ್ರಭುತ್ವವು ಕುಸಿಯುತ್ತಿರುವುದಕ್ಕೆ ನಾವೆಲ್ಲ ಸಾಕ್ಷಿಯಾಗಿದ್ದೇವೆ' ಎಂದು ಟ್ವೀಟ್ ಮಾಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.