
ಕೋಲ್ಕತ್ತ: 24 ಗಂಟೆ ಕಾಲ ಪ್ರಚಾರ ನಡೆಸುವುದಕ್ಕೆ ನಿಷೇಧ ಹೇರಿರುವ ಚುನಾವಣಾ ಆಯೋಗದ ಕ್ರಮವನ್ನು 'ಅಸಾಂವಿಧಾನಿಕ' ಎಂದು ಹೇಳಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಕೋಲ್ಕತ್ತದ ಮಹಾತ್ಮ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದ್ದಾರೆ.
ಬೆಳಗ್ಗೆ 11.40ರ ಹೊತ್ತಿಗೆ ಗಾಲಿಕುರ್ಚಿಯಲ್ಲೇ ಮಹಾತ್ಮ ಗಾಂಧಿ ಪ್ರತಿಮೆ ಎದುರುಗಡೆ ಬಂದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಧರಣಿ ನಡೆಸಿದ್ದಾರೆ.
ಮಮತಾ ಬ್ಯಾನರ್ಜಿ ಒಬ್ಬರೇ ಧರಣಿ ನಡೆಸಿರುವುದು ವಿಶೇಷವೆನಿಸಿತ್ತು. ಟಿಎಂಸಿಯ ಯಾವುದೇ ಬೆಂಬಲಿಗರು ಸಾಥ್ ನೀಡಿರಲಿಲ್ಲ.
ಧರ್ಮಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಮತ್ತು ಕೇಂದ್ರ ಭದ್ರತಾ ಪಡೆಗಳ ವಿರುದ್ಧ ಮಮತಾ ಬ್ಯಾನರ್ಜಿ ಅವರು ನೀಡಿರುವ ಹೇಳಿಕೆಗಳು ರಾಜ್ಯದಾದ್ಯಂತ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತಂದಿದೆ. ಹೀಗಾಗಿ ಅವರ ಪ್ರಚಾರದ ಮೇಲೆ ನಿಷೇಧ ಹೇರಲಾಗಿದೆ ಎಂದು ಚುನಾವಣಾ ಆಯೋಗವು ಹೇಳಿದೆ.
ಸೋಮವಾರ ರಾತ್ರಿ 8ರಿಂದ ಮಂಗಳವಾರ ರಾತ್ರಿ 8ರವರೆಗೆ ನಿಷೇಧ ಜಾರಿಯಲ್ಲಿ ಇರಲಿದೆ. ಚುನಾವಣಾ ಆಯೋಗದ ಈ ಕ್ರಮವನ್ನು ವಿರೋಧಿಸಿರುವ ಮಮತಾ ಬ್ಯಾನರ್ಜಿ, 'ಪ್ರಜಾಪ್ರಭುತ್ವ ವಿರೋಧಿ' ಮತ್ತು 'ಅಸಾಂವಿಧಾನಿಕ' ಎಂದು ತಿರುಗೇಟು ನೀಡಿದ್ದಾರೆ.
ಚುನಾವಣಾ ಆಯೋಗದ ಕ್ರಮ ಖಂಡಿಸಿರುವ ತೃಣಮೂಲ ಕಾಂಗ್ರೆಸ್, 'ಪ್ರಜಾಪ್ರಭುತ್ವದ ಕರಾಳ ದಿನ' ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.