ಕೋಲ್ಕತ್ತ: ‘ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬರಲಿರುವ ಈ ಹೊತ್ತಿನಲ್ಲಿ ನಾವೆಲ್ಲರೂ ಒಟ್ಟುಗೂಡಿ ಕೇಂದ್ರದವಿರುದ್ಧ ಹೋರಾಡಬೇಕಾದ ಅಗತ್ಯವಿದೆ,’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದೇಶದ ಬಿಜೆಪಿಯೇತರ ಮುಖ್ಯಮಂತ್ರಿಗಳಿಗೆ ಮತ್ತು ಪ್ರಮುಖ ನಾಯಕರಿಗೆ ಪತ್ರ ಬರೆದಿದ್ದಾರೆ.
‘ಈ ಪರಿಸ್ಥಿತಿಯಲ್ಲಿ ನಾವೆಲ್ಲರೂ ಒಗ್ಗಟ್ಟಾಗಿರಬೇಕು.ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮತ್ತು ಸಂವಿಧಾನದ ರಕ್ಷಣೆಗಾಗಿ ಕೇಂದ್ರದ ವಿರುದ್ಧ ಪ್ರತಿಭಟಿಸಲು ನಾವೆಲ್ಲರೂ ಒಂದೆಡೆ ಸೇರಿ ಸೂಕ್ತ ಯೋಜನೆ ರೂಪಿಸಬೇಕಿದೆ,’ಎಂದು ಮಮತಾ ಬ್ಯಾನರ್ಜಿ ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಎಲ್ಲರೂ ಎಲ್ಲರನ್ನೂ ಪ್ರೀತಿಸಬೇಕು ಎಂಬುದು ನನ್ನ ಕಲ್ಪನೆ
ಎಲ್ಲರೂ ಎಲ್ಲರನ್ನೂ ಪ್ರೀತಿಸಬೇಕು ಎಂಬುದು ನನ್ನ ಕಲ್ಪನೆ. ಈ ಕಲ್ಪನೆ ಅಳಿದರೆ ಎಲ್ಲವೂ ಅಳಿದಂತೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಕೋಲ್ಕತ್ತದಲ್ಲಿ ಮಾತನಾಡಿರುವ ಅವರು, ‘ಇಂದು ಜಗತ್ತು ಒಂದು ಕುಟುಂಬ ಎಂಬಂತಾಗಿದೆ. ಇಲ್ಲಿ ಎಲ್ಲರೂ ಎಲ್ಲರನ್ನೂ ಪ್ರೀತಿಸಬೇಕು ಎಂಬುದು ನಮ್ಮ ಕಲ್ಪನೆ. ಈ ಕಲ್ಪನೆ ಅಳಿದರೆ ಎಲ್ಲವೂ ಅಳಿದಂತೆ. ಆದರೆ, ಇಂದು ಪ್ರಜಾಪ್ರಭುತ್ವ, ಮೂಲಭೂತ ಹಕ್ಕುಗಳು, ಸಾಂವಿಧಾನಿಕ ಹಕ್ಕುಗಳು ಉಳಿಯುತ್ತವೆಯೇ ಎಂಬುದರ ಬಗ್ಗೆ ಹಲವರು ಆತಂಕಗೊಂಡಿದ್ದಾರೆ. ನಮ್ಮ ಹಕ್ಕುಗಳು ಉಳಿಯುತ್ತವೆ ಎಂದು ನಾನು ಭಾವಿಸಿದ್ದೇನೆ,’ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.