ಕೋಲ್ಕತ್ತ: ಪೆಟ್ರೋಲ್, ಡೀಸೆಲ್ ಮೇಲೆ ಕೇಂದ್ರ ಸರ್ಕಾರ ವಿಧಿಸಿರುವ ತೆರಿಗೆ ಕಡಿತಗೊಳಿಸಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಮೇ ತಿಂಗಳ ಬಳಿಕ ಎಂಟು ಬಾರಿ ಇಂಧನ ದರ ಹೆಚ್ಚಾಗಿರುವುದನ್ನು ಉಲ್ಲೇಖಿಸಿರುವ ಅವರು, ಇದರಿಂದ ಜನಸಾಮಾನ್ಯರ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ. ಇಂಧನ ದರ ಹೆಚ್ಚಳವು ಹಣದುಬ್ಬರದ ಮೇಲೆ ನೇರ ಪರಿಣಾಮ ಬೀರುತ್ತಿದೆ ಎಂದು ಹೇಳಿದ್ದಾರೆ.
‘ದೇಶದ ಸಾಮಾನ್ಯ ಜನರಿಗೆ ಸಂಕಷ್ಟ ಉಂಟುಮಾಡಿರುವ ಕೇಂದ್ರ ಸರ್ಕಾರದ ನೀತಿಯನ್ನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ. ಆಘಾತಕಾರಿ ಸಂಗತಿಯೆಂದರೆ, ದೇಶದಾದ್ಯಂತ ಅನೇಕ ರಾಜ್ಯಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ₹100 ದಾಟಿದೆ’ ಎಂದು ಪತ್ರದಲ್ಲಿ ಮಮತಾ ಉಲ್ಲೇಖಿಸಿದ್ದಾರೆ.
‘ಜನರಿಗೆ ನೆರವಾಗುವ ದೃಷ್ಟಿಯಿಂದ, ಹಣದುಬ್ಬರ ಗಮನದಲ್ಲಿಟ್ಟುಕೊಂಡು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಕೇಂದ್ರ ಸರ್ಕಾರ ವಿಧಿಸುತ್ತಿರುವ ತೆರಿಗೆಯನ್ನು ಗಣನೀಯವಾಗಿ ಇಳಿಕೆ ಮಾಡಬೇಕಾಗಿ ವಿನಂತಿ’ ಎಂದು ಅವರು ಉಲ್ಲೇಖಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.