ಫೇಸ್ಬುಕ್
-ರಾಯಿಟರ್ಸ್ ಚಿತ್ರ
ಉತ್ತರ ಪ್ರದೇಶ: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರ ಸಂಘಟನೆಗಳನ್ನು ಗುರಿಯಾಗಿಸಿ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಕಾಮೆಂಟ್ಗಳನ್ನು ಪೋಸ್ಟ್ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
‘ವಿಕ್ಕಿ ಖಾನ್ (ಸಾಹಿಲ್ ಖಾನ್) ಎಂಬುವರ ಫೇಸ್ಬುಕ್ ಖಾತೆಯಲ್ಲಿ ಪ್ರಚೋದನಕಾರಿ ವಿಡಿಯೊವೊಂದು ವ್ಯಾಪಕವಾಗಿ ಹರಿದಾಡಿದೆ. ವಿಡಿಯೊದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್ಗಳನ್ನು ಮಾಡಲಾಗಿದೆ’ ಎಂದು ಸಬ್ ಇನ್ಸ್ಪೆಕ್ಟರ್ ಕರಮ್ ವೀರ್ ಸಿಂಗ್ ದೂರು ದಾಖಲಿಸಿದ್ದಾರೆ.
‘ಇದೇ ಫೇಸ್ಬುಕ್ ಖಾತೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧವೂ ಆಕ್ಷೇಪಾರ್ಹ ಫೋಸ್ಟ್ಗಳನ್ನು ಹಂಚಿಕೊಳ್ಳಲಾಗಿದೆ. ಇದರಿಂದಾಗಿ ರಾಷ್ಟ್ರೀಯ ಏಕತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಪ್ರಯತ್ನ ಮಾಡಲಾಗಿದೆ’ ಎಂದು ಸಿಂಗ್ ತಿಳಿಸಿದ್ದಾರೆ.
ಕರಮ್ ವೀರ್ ಸಿಂಗ್ ನೀಡಿರುವ ದೂರಿನ ಆಧಾರದ ಮೇಲೆ ಕಾಸ್ಗಂಜ್ ಪೊಲೀಸ್ ಠಾಣೆಯಲ್ಲಿ ವಿಕ್ಕಿ ಖಾನ್ (ಸಾಹಿಲ್ ಖಾನ್) ಎಂಬುವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 197 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ವಿಕ್ಕಿ ಖಾನ್ ಫೇಸ್ಬುಕ್ ಖಾತೆಯಲ್ಲಿ ಮಾಡಲಾದ ಪೋಸ್ಟ್ಗಳು, ಸ್ಕ್ರೀನ್ಶಾಟ್ಗಳನ್ನು ಸೈಬರ್ ಸೆಲ್ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಭಾರತದ ಸಶಸ್ತ್ರ ಪಡೆಗಳು ‘ಆಪರೇಷನ್ ಸಿಂಧೂರ’ದ ಮೂಲಕ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಗಡಿಯಲ್ಲಿ ಎರಡೂ ದೇಶಗಳ ನಡುವೆ ಸೇನಾ ಸಂಘರ್ಷ ತೀವ್ರಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.