ಉಜ್ಜಯನಿ(ಮಧ್ಯಪ್ರದೇಶ): ಸರ್ಕಾರಿ ವೈದ್ಯರ ತಂಡವೊಂದು ಬಿಜೆಪಿ ಸಂಸದ ಅನಿಲ್ ಫಿರೋಜಿಯಾ ಅವರ ನಿವಾಸಕ್ಕೆ ತೆರಳಿ ಕುಟುಂಬ ಸದಸ್ಯರು, ಸಿಬ್ಬಂದಿ ಮತ್ತು ಬೆಂಬಲಿಗರಿಗೆ ಕೋವಿಡ್ ಲಸಿಕೆಯನ್ನು ನೀಡಿದೆ ಎಂಬ ಆರೋಪ ಕೇಳಿಬಂದಿದೆ. ಆ ಹಿನ್ನೆಲೆಯಲ್ಲಿ ಘಟನೆಯ ಬಗ್ಗೆ ತನಿಖೆ ನಡೆಸಲು ಅಲ್ಲಿನ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
'ಸರ್ಕಾರಿ ವೈದ್ಯರು ಬೇರೆಯವರ ಮನೆಗೆ ತೆರಳಿ ಲಸಿಕೆ ನೀಡುವುದಕ್ಕೆ ಅವಕಾಶವಿಲ್ಲ. ಪಿರೋಜಿಯಾ ನಿವಾಸದಲ್ಲಿ ನಡೆದ ಘಟನೆಯ ಬಗ್ಗೆ ತನಿಖೆ ನಡೆಸಲು ಪೊಲೀಸರಿಗೆ ಆದೇಶಿಸಿದ್ದೇನೆ' ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
'ಸಾಮಾನ್ಯ ನಾಗರಿಕರು ಲಸಿಕೆ ಪಡೆಯುವಲ್ಲಿ ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಪಿರೋಜಿಯಾ ನಿವಾಸಕ್ಕೆ ತೆರಳಿ ಸರ್ಕಾರಿ ವೈದ್ಯರು ಲಸಿಕೆ ನೀಡಿರುವುದು ನಾಚಿಕೆಗೇಡಿನ ಕೃತ್ಯ' ಎಂದು ವಿರೋಧ ಪಕ್ಷ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಬಿಜೆಪಿ ಕಾರ್ಯಕರ್ತ ಕಪಿಲ್ ಕಟಾರಿಯಾ ಎಂಬುವವರು ಅನಿಲ್ ಫಿರೋಜಿಯಾ ನಿವಾಸದ ಒಳಗೆ ಲಸಿಕೆ ಪಡೆಯುತ್ತಿರುವ ಚಿತ್ರವನ್ನು ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದೇ ವೇಳೆ ಪಿರೋಜಿಯಾ ಅವರಿಗೆ ಧನ್ಯವಾದಗಳನ್ನೂ ಅರ್ಪಿಸಿದ್ದರು.
ಈ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಿಜೆಪಿ ಸಂಸದರ ನಡೆಯ ವಿರುದ್ಧ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಫಿರೋಜಿಯಾ, 'ಬಿಜೆಪಿ ಕಾರ್ಯಕರ್ತರೊಬ್ಬರು ವೈದ್ಯಕೀಯ ತಂಡವನ್ನು ತಮ್ಮ ನಿವಾಸಕ್ಕೆ ಕರೆದುಕೊಂಡು ಬಂದಿದ್ದಾರೆ. ಇದು ನನ್ನ ಅರಿವಿಗೆ ಬಂದಿರಲಿಲ್ಲ' ಎಂದು ಹೇಳಿದ್ದಾರೆ.
'ತಂಡವನ್ನು ಅಲ್ಲಿಗೆ ಕಳುಹಿಸಲು ಯಾರು ಅನುಮತಿ ನೀಡಿದರು ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ನಾನು ಅಧಿಕಾರಿಗಳನ್ನು ಕೇಳಿದ್ದೇನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮನೆಗೆ ತೆರಳಿ ಲಸಿಕೆ ನೀಡಲು ವೈದ್ಯರಿಗೆ ಅವಕಾಶವಿಲ್ಲ' ಎಂದು ಪಿರೋಜಿಯಾ ತಿಳಿಸಿದ್ದಾರೆ.
'ಉಜ್ಜಯಿನಿ ಸಂಸದರು ತಮ್ಮನ್ನು ತಾವು ವಿವಿಐಪಿ ಎಂದು ಪರಿಗಣಿಸಿ ವೈದ್ಯಕೀಯ ತಂಡವನ್ನು ತಮ್ಮ ಮನೆಗೆ ಕರೆಸಿಕೊಂಡಿದ್ದಾರೆ. ಇದು ಸರ್ಕಾರದ ವೈಫಲ್ಯ ಮತ್ತು ನಾಚಿಕೆಗೇಡಿನ ಕೆಲಸ' ಎಂದು ಕಾಂಗ್ರೆಸ್ ಟೀಕಿಸಿದೆ.
ಫಿರೋಜಿಯಾ ಅವರನ್ನು ಹುದ್ದೆಯಿಂದ ತೆಗೆದುಹಾಕಬೇಕು ಮತ್ತು ಘಟನೆಗೆ ಕಾರಣರಾದ ಅಧಿಕಾರಿಗಳನ್ನು ವಜಾ ಮಾಡಬೇಕು ಎಂದೂ ಮಧ್ಯಪ್ರದೇಶ ಕಾಂಗ್ರೆಸ್ ಒತ್ತಾಯಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.