ಬಂಧನ
(ಪ್ರಾತಿನಿಧಿಕ ಚಿತ್ರ)
ಇಂಫಾಲ: ಮಣಿಪುರದ ಬಿಷ್ಣುಪುರ ಜಿಲ್ಲೆಯ ನಂಬೊಲ್ನಲ್ಲಿ ಅಸ್ಸಾಂ ರೈಫಲ್ಸ್ನ ಇಬ್ಬರು ಸಿಬ್ಬಂದಿ ಸಾವಿಗೆ ಕಾರಣವಾದ ಇಬ್ಬರು ದಾಳಿಕೋರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಾಂತಿಪುರ ಮತ್ತು ಇಶೋಕ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಬೃಹತ್ ಕಾರ್ಯಾಚರಣೆ ನಡೆಸಿವೆ. ಘಟನೆ ಸಂಬಂಧ ಇಬ್ಬರನ್ನು ಬಂಧಿಸಿದ್ದು, ದಾಳಿಯ ವೇಳೆ ಬಳಸಲಾಗಿದೆ ಎಂದು ಶಂಕಿಸಲಾದ ವ್ಯಾನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದಾಳಿ ನಡೆದ 10 ಕಿ.ಮೀ ದೂರದಲ್ಲಿರುವ ಇಂಫಾಲ್ ಪಶ್ಚಿಮ ಜಿಲ್ಲೆಯ ಮುತುಮ್ ಯಾಂಗ್ಬಿಯಲ್ಲಿ ವ್ಯಾನ್ ಪತ್ತೆಯಾಗಿದೆ. ವ್ಯಾನ್ ಮಾಲೀಕರನ್ನು ಗುರುತಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಶುಕ್ರವಾರ ಸಂಜೆ ನಂಬೊಲ್ ಸಬಲ್ ಲೈಕೈ ಪ್ರದೇಶದಲ್ಲಿ ಶಸ್ತ್ರಸಜ್ಜಿತ ಗುಂಪೊಂದು ಅಸ್ಸಾಂ ರೈಫಲ್ಸ್ ಪಡೆಯ ವಾಹನದ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಇಬ್ಬರು ಯೋಧರು ಸಾವಿಗೀಡಾಗಿದ್ದು, ಐವರು ಗಾಯಗೊಂಡಿದ್ದರು.
ಅಸ್ಸಾಂ ರೈಫಲ್ಸ್ನ ಇಬ್ಬರು ಸಿಬ್ಬಂದಿ ಸಾವಿಗೆ ಕಾರಣವಾದ ದಾಳಿಯನ್ನು ಖಂಡಿಸಿ ಸ್ಥಳೀಯರು ಶನಿವಾರ ಪ್ರತಿಭಟನೆ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.