
ಮಣಿಪುರ ಮುಖ್ಯಮಂತ್ರಿ ವೈ. ಖೇಮಚಂದ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಅವರೊಂದಿಗೆ ಉಪ ಮುಖ್ಯಮಂತ್ರಿಗಳಾದ ಎಲ್. ದಿಖೂ, ನೆಮ್ಚಾ ಕಿಪ್ಗೆನ್ ಅವರು ಇದ್ದರು
–ಪಿಟಿಐ ಚಿತ್ರ
ನವದೆಹಲಿ: ಮಣಿಪುರ ಮುಖ್ಯಮಂತ್ರಿ ವೈ. ಖೇಮಚಂದ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಮವಾರ ಭೇಟಿ ಮಾಡಿದರು. ಅವರೊಂದಿಗೆ ಉಪ ಮುಖ್ಯಮಂತ್ರಿಗಳಾದ ಎಲ್. ದಿಖೂ, ನೆಮ್ಚಾ ಕಿಪ್ಗೆನ್ ಅವರು ಇದ್ದರು.
‘ಮಣಿಪುರದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ರಾಜ್ಯ ಸರ್ಕಾರವು ತೆಗೆದುಕೊಂಡ ಕ್ರಮಗಳ ಕುರಿತು ಪ್ರಧಾನಿ ಅವರಿಗೆ ಮಾಹಿತಿ ನೀಡಿದ ಖೇಮಚಂದ್ ಅವರು, ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ವಿಶೇಷ ಕ್ರಮ ಕೈಗೊಳ್ಳುವಂತೆ ಮೋದಿ ಅವರನ್ನು ಒತ್ತಾಯಿಸಿದರು. ಮಣಿಪುರಕ್ಕೆ ಭೇಟಿ ನೀಡುವಂತೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಪ್ರಧಾನಿ ಅವರಿಗೆ ಆಹ್ವಾನ ನೀಡಿದರು’ ಎಂದು ಮಣಿಪುರ ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಧಾನಿ ಭೇಟಿಗೂ ಮುನ್ನ ಕೇಂದ್ರ ಕೃಷಿ ಮತ್ತು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದ್ದರು. ‘ರಾಜ್ಯದ ಪುನರ್ವಸತಿ ಮತ್ತು ಸಮಗ್ರ ಅಭಿವೃದ್ಧಿಯ ಮಹತ್ವದ ಹೆಜ್ಜೆಯಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಅಡಿಯಲ್ಲಿ ಮನೆಯಿಲ್ಲದವರಿಗೆ 5,000 ಹೊಸ ಮನೆ ನಿರ್ಮಾಣಕ್ಕೆ ಚೌಹಾಣ್ ಅವರು ಅನುಮೋದನೆ ನೀಡಿದರು’ ಎಂದು ಖೇಮಚಂದ್ ಅವರು ತಿಳಿಸಿದರು.
ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರನ್ನು ಖೇಮಚಂದ್ ಸೋಮವಾರ ಪ್ರತ್ಯೇಕವಾಗಿ ಭೇಟಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.