
ಶಿವರಾಜ್ ಸಿಂಗ್ ಚೌಹಾಣ್
ಇಂಫಾಲ್: ಮಣಿಪುರದಲ್ಲಿ ಸ್ಥಳಾಂತರಗೊಂಡಿರುವ ಜನರ ಪುನರ್ವಸತಿಯತ್ತ ಗಮನಹರಿಸಿರುವ ಕೇಂದ್ರ ಸರ್ಕಾರ 5 ಸಾವಿರ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಿದೆ.
ಜನಾಂಗೀಯ ಹಿಂಸಾಚಾರದಲ್ಲಿ ಮನೆಗಳನ್ನು ಕಳೆದಕೊಂಡವರಿಗೆ ಪುನರ್ವಸತಿ ಕಲ್ಪಿಸುವ ಉದ್ದೇಶದಿಂದ ಪಿಎಂಎವೈ-ಜಿ ಯೋಜನೆ ಅಡಿಯಲ್ಲಿ ಮನೆಗಳನ್ನು ನಿರ್ಮಾಣ ಮಾಡಲು ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅನುಮತಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯಲ್ಲಿ ಸೋಮವಾರ ಸಂಜೆ ಮಣಿಪುರ ಮುಖ್ಯಮಂತ್ರಿ ಖೇಮಚಂದ್ ಸಿಂಗ್ ಅವರು ಶಿವರಾಜ್ ಸಿಂಗ್ ಅವರನ್ನು ಭೇಟಿ ಮಾಡಿದ ಬಳಿಕ ಈ ನಿರ್ಧಾರ ಹೊರಬಿದ್ದಿದೆ. ಇದೇ ವೇಳೆ ರಾಜ್ಯದಲ್ಲಿ ಶಾಂತಿ ಹಾಗೂ ಸಾಮಾನ್ಯ ಸ್ಥಿತಿ ಪುನರ್ ಸ್ಥಾಪನೆಗೆ ಕೇಂದ್ರದಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಎಂದು ಅಧಿಕಾರಿಗಳು ಹೇಳಿದ್ದಾರೆ.
2023ರಿಂದ ಕಣಿವೆ ರಾಜ್ಯದಲ್ಲಿ ಮೈತೇಯಿ ಹಾಗೂ ಕುಕಿ ಸಮುದಾಯದ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ ಕನಿಷ್ಠ 260 ಮಂದಿ ಸಾವನ್ನಪ್ಪಿದ್ದು, ಸಾವಿರಾರು ಜನರು ಮನೆಗಳನ್ನು ಕಳೆದುಕೊಂಡಿದ್ದಾರೆ.
ಈಗಾಗಲೇ ರಾಜ್ಯ ಸರ್ಕಾರ ಮಾರ್ಚ್ ಅಂತ್ಯದೊಳಗೆ 10 ಸಾವಿರ ಜನರಿಗೆ ಮನೆಗಳು ಸೇರಿದಂತೆ ಅಗತ್ಯ ಪುನರ್ವಸತಿ ಕಲ್ಪಿಸುವ ಗುರಿ ಹೊಂದಿದ್ದು ಈ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈವರೆಗೆ ರಾಜ್ಯದಲ್ಲಿ 16,500 ಜನರಿಗೆ ಪುನರ್ವಸತಿ ಕಲ್ಪಿಸಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.