ಸಾವು (ಪ್ರಾತಿನಿಧಿಕ ಚಿತ್ರ)
ಇಂಫಾಲ್(ಮಣಿಪುರ): ಬಿಹಾರದ ಇಬ್ಬರು ವಲಸೆ ಕಾರ್ಮಿಕರನ್ನು ಭಾನುವಾರ ಮಣಿಪುರದ ಕಕ್ಷಿಂಗ್ ಜಿಲ್ಲೆಯಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ. ಮೃತರನ್ನು ಬಿಹಾರದ ಗೋಪಾಲ್ಗಂಜ್ ಜಿಲ್ಲೆಯ ರಾಜವಾಹಿ ಹಳ್ಳಿಯ ದಶರತ್ ಕುಮಾರ್ (17)ಮತ್ತು ಸುನಲಾಲ್ ಕುಮಾರ್ (18) ಎಂದು ಗುರುತಿಸಲಾಗಿದೆ.
ಕಾರ್ಮಿಕರ ಹತ್ಯೆಯನ್ನು ಖಂಡಿಸಿರುವ ಸಿಎಂ ಬಿರೇನ್ ಸಿಂಗ್, ಇದೊಂದು ಭಯೋತ್ಪಾದಕ ಕೃತ್ಯ ಎಂದು ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ಘೋಷಿಸಿದ್ದಾರೆ.
'ಮಣಿಪುರದ ಕಕ್ಚಿಂಗ್ ಜಿಲ್ಲೆಯಲ್ಲಿ ಬಿಹಾರದ ಸಹೋದರರಾದ ಸುನಲಾಲ್ ಕುಮಾರ್(18) ಮತ್ತು ದಶರತ್ ಕುಮಾರ್ (17) ಅವರ ಬರ್ಬರ ಹತ್ಯೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಈ ಭಯೋತ್ಪಾದನಾ ಕೃತ್ಯವು ನಮ್ಮ ಮೌಲ್ಯಗಳ ಮೇಲೆ ನೇರ ದಾಳಿಯಾಗಿದೆ ಮತ್ತು ಅವರ ಕುಟುಂಬಕ್ಕೆ ನನ್ನ ಸಂತಾಪಗಳು’ಎಂದು ಸಿಎಂ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ರಾಜ್ಯವನ್ನು ಅಸ್ಥಿರಗೊಳಿಸಲು ನಡೆದಿರುವ ಬಹುದೊಡ್ಡ ಸಂಚು ಇದಾಗಿದೆ ಎಂದು ಅವರು ಹೇಳಿದ್ದಾರೆ.
‘ಈ ಮಹತ್ವದ ಘಟ್ಟದಲ್ಲಿ ರಾಜ್ಯದಲ್ಲಿ ಅಸ್ಥಿರತೆ ಸೃಷ್ಟಿಸಲು ಮತ್ತು ಮತ್ತಷ್ಟು ಗೊಂದಲ ಸೃಷ್ಟಿಸಲು ನಡೆದಿರುವ ಬಹುದೊಡ್ಡ ಸಂಚು ಇದು ಎಂಬುದನ್ನು ನಾವು ಅಲ್ಲಗಳೆಯುವಂತಿಲ್ಲ. ಇಂತಹ ವಿನಾಶಕಾರಿ ಶಕ್ತಿಗಳ ವಿರುದ್ಧ ನಾವು ಒಗ್ಗಟ್ಟಾಗಿ ನಿಲ್ಲಬೇಕು. ಅವರು ರಾಜ್ಯದಲ್ಲಿ ಭಯ ಮತ್ತು ಅಭದ್ರತೆ ಸೃಷ್ಟಿಸುವುದರಲ್ಲಿ ಸಫಲರಾಗುವುದಿಲ್ಲ ಎಂಬ ಸಂದೇಶ ಕೊಡಬೇಕು’ಎಂದಿದ್ದಾರೆ.
ಅಗತ್ಯ ಬಿದ್ದರೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ(ಎನ್ಐಎ) ವರ್ಗಾಯಿಸುವುದಾಗಿ ಸಿಎಂ ಹೇಳಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಹ ಕಾರ್ಮಿಕರ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೊಷಿಸಿದ್ದಾರೆ.
ಅಲ್ಲದೆ, ಮೃತರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.