ADVERTISEMENT

ಮಣಿಪುರ ಸಂಘರ್ಷಣೆ | ಉದ್ವಿಗ್ನ ವಾತಾವರಣ: ಹೆಚ್ಚುವರಿ ಭದ್ರತಾ ಪಡೆಗಳ ನಿಯೋಜನೆ

ಪಿಟಿಐ
Published 9 ಮಾರ್ಚ್ 2025, 7:20 IST
Last Updated 9 ಮಾರ್ಚ್ 2025, 7:20 IST
<div class="paragraphs"><p>ಮಣಿಪುರ ಹಿಂಸಾಚಾರ (ಸಂಗ್ರಹ ಚಿತ್ರ)</p></div>

ಮಣಿಪುರ ಹಿಂಸಾಚಾರ (ಸಂಗ್ರಹ ಚಿತ್ರ)

   

ಪಿಟಿಐ ಚಿತ್ರ

ಇಂಫಾಲ: ಮಣಿಪುರದ ಹಿಂಸಾಚಾರ ಪೀಡಿತ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ (ಭಾನುವಾರ) ಉದ್ವಿಗ್ನ ವಾತಾವರಣ ಉಂಟಾಗಿದ್ದು, ಹೆಚ್ಚುವರಿ ಭದ್ರತಾ ಪಡೆಗಳ ನಿಯೋಜನೆ ಮಾಡಲಾಗಿದೆ ಎಂದು ವರದಿಯಾಗಿದೆ.

ADVERTISEMENT

ಕಾಂಗ್‌ಪೋಕ್ಪಿ ಜಿಲ್ಲೆಯ ವಿವಿಧೆಡೆ ಕುಕಿ ಸಮುದಾಯದ ಪ್ರತಿಭಟನಕಾರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ ಒಬ್ಬ ಪ್ರತಿಭಟನಕಾರ ಮೃತಪಟ್ಟಿದ್ದಾರೆ. ಮಹಿಳೆಯರು ಮತ್ತು ಪೊಲೀಸರು ಸೇರಿದಂತೆ 40ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಂಡೇಟಿನಿಂದ ಗಾಯಗೊಂಡಿದ್ದ 30 ವರ್ಷ ವಯಸ್ಸಿನ ಲಾಲ್‌ಗೌಥಾಂಗ್ ಎನ್ನುವವರು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟರು. ಗಾಯಗೊಂಡ 40 ಮಂದಿಯನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಜಿಲ್ಲೆಯಲ್ಲಿ ಉದ್ದಕ್ಕೂ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದಾಗಿ ಗಸ್ತು ನಡೆಸಲಾಗುತ್ತಿದೆ ಎಂದು ಜಿಲ್ಲಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಣಿಪುರದಲ್ಲಿ ಜನರ ಸಂಚಾರಕ್ಕೆ ನಿರ್ಬಂಧಗಳು ಇರಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿರುವ ಸೂಚನೆಯನ್ನು ಕುಕಿ ಸಮುದಾಯದ ಕೆಲವರು ವಿರೋಧಿಸಿದ್ದರು. ಸೂಚನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ ಸಿಡಿಸಿದಾಗ, ಭದ್ರತಾ ಪಡೆಗಳು ಮತ್ತು ಪ್ರತಿಭಟನಕಾರರ ನಡುವೆ ಘರ್ಷಣೆ ಉಂಟಾಯಿತ್ತು.

ಪ್ರತಿಭಟನೆಯಲ್ಲಿ ಭಾಗಿಯಾದವರು ಖಾಸಗಿ ವಾಹನಗಳಿಗೆ ಬೆಂಕಿ ಹಚ್ಚಿ, ಇಂಫಾಲ್‌ನಿಂದ ಸೇನಾಪತಿ ಜಿಲ್ಲೆಗೆ ತೆರಳುತ್ತಿದ್ದ ಸರ್ಕಾರಿ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸನ್ನು ತಡೆಯಲು ಯತ್ನಿಸಿದಾಗ ಪರಿಸ್ಥಿತಿ ಇನ್ನಷ್ಟು ವಿಷಮಗೊಂಡಿತು. ಪ್ರತಿಭಟನಕಾರರು ಇಂಫಾಲ್–ದಿಮಪುರ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡ್ಡಿಪಡಿಸಿದರು. ಸರ್ಕಾರಿ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟುಮಾಡಲು ಟೈರ್‌ಗಳಿಗೆ ಬೆಂಕಿ ಹಚ್ಚಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.