ದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಆರೋಪಿತ ಉಪಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡ ಮನೀಶ್ ಸಿಸೋಡಿಯಾ ಸೋಮವಾರ ಸಿಬಿಐ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ.
ದೆಹಲಿ ಅಬಕಾರಿ ನೀತಿ 2021–22 ಅಭಿವೃದ್ಧಿ ಹಗರಣದಲ್ಲಿ ಸಿಸೋಡಿಯಾ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಸೋಮವಾರ 11 ಗಂಟೆಗೆ ಸಿಬಿಐ ಕೇಂದ್ರ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ.
ತಾವು ವಿಚಾರಣೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಸಿಸೋಡಿಯಾ ಹೇಳಿದ್ದಾರೆ. ‘ಸಿಬಿಐ ಅಧಿಕಾರಿಗಳು ತಮ್ಮ ಮನೆಗೆ ದಾಳಿ ಮಾಡಿ 14 ಗಂಟೆಗಳ ಶೋಧ ಕಾರ್ಯ ನಡೆಸಿದ್ದರು. ಬ್ಯಾಂಕ್ ಲಾಕರ್ ಅನ್ನು ಹುಡುಕಿದ್ದರು. ಎಲ್ಲಿಯೂ ಅವರಿಗೆ ಏನೂ ಸಿಕ್ಕಿರಲಿಲ್ಲ. ನಾಳೆ ಸಿಬಿಐ ಕೇಂದ್ರ ಕಚೇರಿಗೆ ಕರೆಯಲಾಗಿದೆ. ಸತ್ಯಮೇವ ಜಯತೇ’ ಎಂದು ಸಿಸೋಡಿಯಾ ಟ್ವೀಟ್ನಲ್ಲಿ ಹೇಳಿದ್ದಾರೆ.
ಈ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಶುಕ್ರವಾರ ರಾಷ್ಟ್ರ ರಾಜಧಾನಿಯ 25 ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಅ.7ರಂದು ದೇಶದ 35 ಸ್ಥಳಗಳಲ್ಲಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ದಾಳಿಯಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.