ಪುಣೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ರೈತರ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಆದರೆ, ಈಗ ರೈತರ ಸಮಸ್ಯೆಗಳ ಬಗ್ಗೆ ಯಾರೂ ತಲೆಕೆಡಿಸಿಕೊಂಡಿಲ್ಲ ಎಂದು ಎನ್ಸಿಪಿ ನಾಯಕ ಶರದ್ ಪವಾರ್ ಕಳವಳ ವ್ಯಕ್ತಪಡಿಸಿದ್ದಾರೆ.
ಪುಣೆಯಲ್ಲಿ ಆಯೋಜಿಸಲಾಗಿದ್ದ ಶೇತ್ಕರಿ ಆಕ್ರೋಶ ಮೋರ್ಚಾ ಸಮಾರೋಪ ಸಮಾರಂಭದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪವಾರ್, ‘ಕೆಲವು ರೈತರು ಆತ್ಮಹತ್ಯೆ ಮಾಡಿಕೊಂಡ ನಂತರ ಅಂದಿನ ಪ್ರಧಾನಿ ಆಗಿದ್ದ ಮನಮೋಹನ್ ಸಿಂಗ್ ಅವರು ಅಮರಾವತಿಗೆ ಭೇಟಿ ನೀಡಿದ್ದು ನನಗೆ ನೆನಪಿದೆ. ಅವರು ಜನರು ಹಾಗೂ ರೈತರ ಬಗ್ಗೆ ಹೆಚ್ಚು ಕಾಳಜಿ ಹೊಂದಿದ್ದವರಾಗಿದ್ದರು. ಅಲ್ಲದೆ, ಆ ಸಂದರ್ಭದಲ್ಲಿ ಸುಮಾರು ₹72,000 ಕೋಟಿ ಕೃಷಿ ಸಾಲವನ್ನೂ ಸಿಂಗ್ ಮನ್ನಾ ಮಾಡಿದ್ದರು ಎಂದು ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸರ್ಕಾರದಲ್ಲಿ ಶರದ್ ಪವಾರ್ ಕೃಷಿ ಸಚಿವರಾಗಿದ್ದರು.
ಕಾರ್ಯಕ್ರಮದಲ್ಲಿ ಉದ್ಧವ್ ಠಾಕ್ರೆ, ಶಿವಸೇನೆಯ ಸಂಜಯ್ ರಾವುತ್ (ಯುಬಿಟಿ), ಕಾಂಗ್ರೆಸ್ನ ಬಾಳಾಸಾಹೇಬ್ ಥೋರಟ್, ಎನ್ಸಿಪಿ ಸಂಸದೆ ಸುಪ್ರಿಯಾ ಸುಳೆ ಸೇರಿದಂತೆ ಮಹಾ ವಿಕಾಸ್ ಅಘಾಡಿಯ ಹಲವು ನಾಯಕರು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.