ಕೋಹಿಮಾ: ಬಂಡುಕೋರರ ವಿರುದ್ಧದ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 13 ಮಂದಿ ಮೃತಪಟ್ಟ ಘಟನೆ ನಾಗಾಲ್ಯಾಂಡ್ನ ಮೋನ್ ಜಿಲ್ಲೆಯ ಆಟಿಂಗ್ನಲ್ಲಿ ಶನಿವಾರ ರಾತ್ರಿ ನಡೆದಿದೆ.
ಟ್ರಕ್ಕೊಂದರ ಮೇಲೆ ಭದ್ರತಾ ಪಡೆಯು ಗುಂಡಿನ ದಾಳಿ ನಡೆಸಿತ್ತು. ಇದನ್ನು ಪ್ರತಿಭಟಿಸಿ ಸ್ಥಳದಲ್ಲಿ ಜಮಾಯಿಸಿದ್ದ ಜನರ ಗುಂಪಿನ ಮೇಲೆಯೂ ಗುಂಡಿನ ದಾಳಿ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಮೋನ್ ಜಿಲ್ಲೆಯು ಮ್ಯಾನ್ಮಾರ್ ಜತೆ ಗಡಿ ಹೊಂದಿದೆ.
ಘಟನೆ ದುರದೃಷ್ಟಕರ: ಅಮಿತ್ ಶಾ ಟ್ವೀಟ್
ನಾಗಾಲ್ಯಾಂಡ್ನ ಮೋನ್ ಜಿಲ್ಲೆಯ ಆಟಿಂಗ್ನಲ್ಲಿ ನಡೆದಿರುವ ಘಟನೆ ದುರದೃಷ್ಟಕರ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಘಟನೆ ಬಗ್ಗೆ ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರವು ರಚಿಸಿರುವ ಉನ್ನತ ಮಟ್ಟದ ಎಸ್ಐಟಿಯು ಘಟನೆ ಬಗ್ಗೆ ವಿವರವಾಗಿ ತನಿಖೆ ನಡೆಸಲಿದ್ದು, ನ್ಯಾಯ ಒದಗಿಸಿಕೊಡಲಿದೆ ಎಂದು ಉಲ್ಲೇಖಿಸಿದ್ದಾರೆ.
ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಕೂಡ ಘಟನೆಯನ್ನು ಖಂಡಿಸಿದ್ದಾರೆ.
‘ಆಟಿಂಗ್ನಲ್ಲಿ ನಾಗರಿಕರ ಹತ್ಯೆಯಾಗಿರುವುದು ದುರದೃಷ್ಟಕರ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಉನ್ನತ ಮಟ್ಟದ ವಿಶೇಷ ತನಿಖಾ ತಂಡ (ಎಸ್ಐಟಿ) ಘಟನೆಯ ಬಗ್ಗೆ ತನಿಖೆ ನಡೆಸಲಿದ್ದು, ನ್ಯಾಯ ಒದಗಿಸಲಾಗುವುದು. ಎಲ್ಲ ವರ್ಗದ ಜನರು ಶಾಂತಿ ಕಾಪಾಡಬೇಕು’ ಎಂದು ನೆಫಿಯು ರಿಯೊ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.