ಹೋರಾಟಗಾರ ಮನೋಜ್ ಜರಾಂಗೆ ಅವರು ಮುಂಬೈನ ಆಜಾದ್ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
-ಪಿಟಿಐ ಚಿತ್ರ
ಮುಂಬೈ: ‘ಮರಾಠರು ರಾಜಕೀಯದಲ್ಲಿ ತೊಡಗಿಸಿಕೊಳ್ಳಲು ಬಯಸುವುದಿಲ್ಲ ಬದಲಾಗಿ ಮೀಸಲಾತಿಯನ್ನು ಮಾತ್ರ ಬಯಸುತ್ತಿದ್ದಾರೆ. ರಾಜ್ಯ ಸರ್ಕಾರ ನಮ್ಮ ಸಮುದಾಯದ ತಾಳ್ಮೆಯನ್ನು ಪರೀಕ್ಷಿಸಬಾರದು’ ಎಂದು ಹೋರಾಟಗಾರ ಮನೋಜ್ ಜರಾಂಗೆ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮರಾಠರು ಇತರ ಹಿಂದುಳಿದ ವರ್ಗಗಳ (ಒಬಿಸಿ) ಕೋಟಾದಡಿ ಮೀಸಲಾತಿಯನ್ನು ಬಯಸುತ್ತಿದ್ದಾರೆ ಎಂಬ ತಪ್ಪು ಮಾಹಿತಿಯನ್ನು ರಾಜ್ಯ ಸರ್ಕಾರ ಹರಡುತ್ತಿದೆ’ ಎಂದು ಕಿಡಿಕಾರಿದ್ದಾರೆ.
‘ಮರಾಠರು ಕುಣಬಿಗಳ ರಕ್ತ ಸಂಬಂಧಿಗಳು ಎಂಬ ಕರಡು ಅಧಿಸೂಚನೆಯನ್ನು ನಮ್ಮ ಸಮುದಾಯದ ಬೇಡಿಕೆಯಂತೆ ಕಾನೂನಾಗಿಸಬೇಕು. ಅರ್ಹತೆಯ ಆಧಾರದ ಮೇಲೆ ನಮಗೆ ಸಿಗಬೇಕಾದ ಮೀಸಲಾತಿಯನ್ನು ನೀಡುವಂತೆ ನಾವು ಒತ್ತಾಯಿಸುತ್ತಿದ್ದೇವೆ’ ಎಂದು ಅವರು ಹೇಳಿದ್ದಾರೆ.
‘ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರೇ, ಬಡ ಮರಾಠರನ್ನು ಅವಮಾನಿಸಬೇಡಿ. ನಾವು ಒಬಿಸಿ ಮೀಸಲಾತಿಯನ್ನು ಕಡಿಮೆ ಮಾಡುವಂತೆ ಕೇಳುತ್ತಿಲ್ಲ. ತಪ್ಪು ಮಾಹಿತಿಯನ್ನು ಹರಡಬೇಡಿ’ ಎಂದು ಜರಾಂಗೆ ಗುಡುಗಿದ್ದಾರೆ.
ದೇವೇಂದ್ರ ಫಡಣವೀಸ್ ಅವರು ರಾಜ್ಯದಲ್ಲಿ ಅಸ್ಥಿರತೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದೂ ಅವರು ಆರೋಪಿಸಿದ್ದಾರೆ.
ಮರಾಠ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಮನೋಜ್ ಜರಾಂಗೆ ಅವರು ಮುಂಬೈನ ಆಜಾದ್ ಮೈದಾನದಲ್ಲಿ ಶುಕ್ರವಾರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
‘ಬೇಡಿಕೆ ಈಡೇರುವವರೆಗೆ ಸತ್ಯಾಗ್ರಹ ಕೈಬಿಡುವುದಿಲ್ಲ. ಗುಂಡಿಟ್ಟು ಕೊಂದರೂ ನಾನು ಹಿಂದೆ ಸರಿಯುವುದಿಲ್ಲ’ ಎಂದು ಜರಾಂಗೆ ಹೇಳಿದ್ದಾರೆ. ಮನೋಜ್ ಜರಾಂಗೆ ಜೊತೆ ಮಾತನಾಡಲು ಸಿದ್ಧ ಎಂದು ಸರ್ಕಾರ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.