
ಲಖನೌ: ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದೊಂದಿಗೆ (ಎಸ್ಪಿ) ಬಹುಜನ ಸಮಾಜವಾದಿ ಪಕ್ಷವು (ಬಿಎಸ್ಪಿ) ಮೈತ್ರಿ ಮಾಡಿಕೊಳ್ಳಲಿದೆ ಎಂಬ ವದಂತಿಗಳನ್ನು ಪಕ್ಷದ ಮುಖ್ಯಸ್ಥೆ ಮಾಯಾವತಿ ಅಲ್ಲಗಳೆದರು.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೈತ್ರಿ ಕುರಿತ ವರದಿಗಳು ಸುಳ್ಳುಸುದ್ದಿಗಳಾಗಿವೆ. ನಮ್ಮ ಪಕ್ಷವು ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ’ ಎಂದು ಸ್ಪಷ್ಟಪಡಿಸಿದರು. ‘ನಮ್ಮ ಪಕ್ಷವನ್ನು ದುರ್ಬಲಗೊಳಿಸುವ ಪ್ರಯತ್ನದ ಭಾಗವಾಗಿ ಈ ರೀತಿ ವದಂತಿ ಹಬ್ಬಿಸಲಾಗುತ್ತಿದೆ. ಕಾರ್ಯಕರ್ತರು ಇಂತಹ ಸುದ್ದಿಗಳನ್ನು ನಂಬಬಾರದು’ ಎಂದರು.
ಬಿಜೆಪಿ, ಕಾಂಗ್ರೆಸ್ ಮತ್ತು ಎಸ್ಪಿ ಪಕ್ಷಗಳು ಅಂಬೇಡ್ಕರ್ ವಿರೋಧಿಗಳಾಗಿವೆ. ನಮ್ಮ ಪಕ್ಷಕ್ಕೆ ಹಾನಿ ಮಾಡಲು ಮುಂದಾಗಿವೆ ಎಂದು ಆರೋಪಿಸಿದರು.
ಎಸ್ಪಿ ಹಾಗೂ ಬಿಎಸ್ಪಿಗಳ ನಡುವಿನ ಸಂಬಂಧವು ವೃದ್ಧಿಯಾಗುತ್ತಿದ್ದು, ಇದು ಇನ್ನಷ್ಟು ಗಾಢವಾಗಲಿದೆ ಎಂದು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಇತ್ತೀಚೆಗೆ ಹೇಳಿಕೆ ನೀಡಿದ್ದರು.
ಹೀಗಾಗಿ ಪಕ್ಷಗಳು ಮೈತ್ರಿ ಮಾಡಿಕೊಂಡು, ಜಂಟಿಯಾಗಿ ಚುನಾವಣೆಗೆ ಸ್ಪರ್ಧಿಸಲಿವೆ ಎನ್ನಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.