ದೆಹಲಿ: 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದು, ಆಕೆಗೆ ಬಲವಂತವಾಗಿ ಆ್ಯಸಿಡ್ ಕುಡಿಸಲಾಗಿದೆ ಎಂದು ದೆಹಲಿ ಪೊಲೀಸರು ಶನಿವಾರ ತಿಳಿಸಿದ್ದಾರೆ. ಬಾಲಕಿ ಕೆಲಸ ಮಾಡುತ್ತಿದ್ದ ಕಾರ್ಖಾನೆಯ ಮ್ಯಾನೇಜರ್ನಿಂದಲೇ ಕೃತ್ಯ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಖಾನೆಯ ವ್ಯವಸ್ಥಾಪಕ ಜೈ ಪ್ರಕಾಶ್ (31) ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅನಾರೋಗ್ಯಕ್ಕೀಡಾಗಿರುವ ತನ್ನ ಪತ್ನಿಯನ್ನು ಭೇಟಿ ಮಾಡಿಸುವ ನೆಪದಲ್ಲಿ ಜುಲೈ 2 ರಂದು ಜೈ ಪ್ರಕಾಶ್ ಸಂತ್ರಸ್ತೆಯನ್ನು ತನ್ನ ಮನೆಗೆ ಕರೆಸಿಕೊಂಡಿದ್ದ. ನಂತರ ಆತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
‘ಘಟನೆ ನಡೆದು ಕೆಲ ದಿನಗಳ ನಂತರ ಸಂತ್ರಸ್ತೆಯನ್ನು ದಾರಿಯಲ್ಲಿ ಮತ್ತೆ ಸಿಕ್ಕಿದ್ದ ಜೈ ಪ್ರಕಾಶ್, ಆಕೆಗೆ ಆಸಿಡ್ ಕುಡಿಸಿದ್ದಾನೆ. ಮನೆಗೆ ತೆರಳಿದ ಆಕೆ ಪ್ರಜ್ಞಾಹೀನಳಾಗಿದ್ದಾಳೆ. ಹೀಗಾಗಿ ಸಂತ್ರಸ್ತೆಯನ್ನು ದೆಹಲಿಯ ಏಮ್ಸ್ಗೆ ದಾಖಲಿಸಲಾಗಿದೆ. ಆಕೆಯ ಸ್ಥಿತಿ ಗಂಭೀರವಾಗಿದೆ’ ಎಂದು ಉಪ ಪೊಲೀಸ್ ಆಯುಕ್ತ ಸಮೀರ್ ಶರ್ಮಾ ತಿಳಿಸಿದ್ದಾರೆ.
ಶನಿವಾರ ಎನ್ಜಿಒ ಸದಸ್ಯರೊಬ್ಬರ ಸಮ್ಮುಖದಲ್ಲಿ ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
ಈ ಮಧ್ಯೆ, ದೆಹಲಿ ಮಹಿಳಾ ಆಯೋಗವು (ಡಿಸಿಡಬ್ಲ್ಯು) ಈ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ನೋಟಿಸ್ ನೀಡಿದೆ.
ಸಂತ್ರಸ್ತೆಯ ಹೇಳಿಕೆಯನ್ನು ತಕ್ಷಣವೇ ದಾಖಲಿಸಿ ಅದನ್ನು ಮ್ಯಾಜಿಸ್ಟ್ರೇಟ್ಗೆ ಸಲ್ಲಿಸುವಂತೆ ಪೊಲೀಸರಿಗೆ ಆಯೋಗ ಸೂಚಿಸಿದೆ.
‘15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆಗೆ ಯತ್ನಿಸಿದ ಗಂಭೀರ ದೂರು ಆಯೋಗದಲ್ಲಿ ದಾಖಲಾಗಿದೆ. ಬಾಲಕಿಗೆ ಬಲವಂತವಾಗಿ ಆಸಿಡ್ ಕುಡಿಸಲಾಗಿತ್ತು ಎನ್ನಲಾಗಿದೆ. ನಮ್ಮ ತಂಡವು ಬಾಲಕಿಯ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಆಕೆ ಮತ್ತು ಆಕೆಯ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುವುದು’ ಎಂದು ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.